Sunday, November 28, 2010

ಕಾರ್ನಾಡರನ್ನು ಪ್ರೀತಿಸುತ್ತಾ...

ನಮಗೆ ವಚನಗಳೆಂದರೆ ಪ್ರೀತಿ. ನೀತಿ ಪಾಠ ಹೇಳುವವರು ಸಿಕ್ಕರಂತೂ ಅತೀವ ಸಂತೋಷ. ಹೀಗೆ ಮಾಡು, ಹಾಗಿರು, ಇದು ಬದುಕಿನ ರೀತಿ, ಇದು ತಪ್ಪು, ಇದು ನಿಷಿದ್ಧ ಎಂದು ಹೇಳುವ ಲೇಖಕರು ಶ್ರೇಷ್ಠರು. ಸಾಹಿತ್ಯ ಎಂದರೆ ಬದುಕುವುದನ್ನು ಕಲಿಸುವಂಥ ಕಲೆ. ಅದರಲ್ಲೊಂದು ಸಂದೇಶ ಇರಲೇಬೇಕು. ಬೇಕೋ ಬೇಡವೋ, ನಮಗಂತೂ ಸಂದೇಶ ಬೇಕು,
ಸಿನಿಮಾ ನಿರ್ದೇಶಕರನ್ನೂ ಪತ್ರಕರ್ತರು ಹಾಗಂತ ಕೇಳುವುದುಂಟು. ನಿಮ್ಮ ಸಿನಿಮಾದ ಸಂದೇಶ ಏನು. ಸಮಾಜಕ್ಕೆ ಏನು ಸಂದೇಶ ಕೊಡುತ್ತೀರಿ, ಈ ಸಿನಿಮಾ ಕೆಟ್ಟ ಸಂದೇಶ ನೀಡುವುದಿಲ್ಲವೇ –ಹೀಗೆ ಸಾಗುತ್ತದೆ ಪ್ರಶ್ನೆಗಳ ಸರಮಾಲೆ. ಸಂದೇಶ ಕೊಡುವುದಕ್ಕೆ ಸಿನಿಮಾ ಪ್ರನಾಳಿಕೆಯೋ ಒಡಂಬಡಿಕೆಯೋ ಅಲ್ಲವಲ್ಲ. ಅದು ಬದುಕಿನ ಪ್ರತಿಬಿಂಬ ಮಾತ್ರ.ಒಂದು ಜೀವ ನಮ್ಮೆದುರು ಬದುಕಿದ್ದನ್ನು ನೋಡುವಾಗ ನಮಗೆ ಅದರಿಂದ ಏನು ಹುಟ್ಟುತ್ತದೆಯೋ ಅದಷ್ಟೇ ಸಂದೇಶ. ಏನೂ ಹುಟ್ಟದೇ ಹೋಗುವ ಸಾಧ್ಯತೆಯೂ ಉಂಟು. ಅದು ಆ ಜೀವದ ಸೋಲಂತೂ ಅಲ್ಲ. ಯಾಕೆಂದರೆ ಯಾರೂ ಸಂದೇಶ ಕೊಡುವುದಕ್ಕೆಂದೇ ಬದುಕುವುದಿಲ್ಲ.
ಮೊನ್ನೆ ಹೀಗಾಯಿತು. ಗಿರೀಶ್ ಕಾರ್ನಾಡರ ನಾಟಕಗಳ ಮಾತು ಬಂತು. ನಮ್ಮನ್ನು ಈಗಲೂ ಸೆಳೆಯುವ ನಾಟಕಕಾರ ಗಿರೀಶ್. ಅವರ ನಾಟಕಗಳ ಪಾತ್ರಗಳು ಜೀವಂತವಾಗಿರುತ್ತವೆ. ಹಲವು ವ್ಯಕ್ತಿತ್ವಗಳನ್ನು ಒಳಗೊಂಡಿರುತ್ತವೆ. ಸಂಕೀರ್ಣವಾಗಿರುತ್ತವೆ. ಸರಿತಪ್ಪುಗಳಾಚೆಗೂ ಬದುಕಬಲ್ಲ ತೀವ್ರತೆ ಇರುತ್ತವೆ. ಹೀಗೆಲ್ಲ ಮಾತಾಡುತ್ತಾ ತುಘಲಕ್ ಬಗ್ಗೆ ಮಾತಾಡುತ್ತಿರಬೇಕಾದರೆ `ತುಘಲಕ್ ನಾಟಕದ ಸಂದೇಶ ಏನು ಹೇಳು ನೋಡೋಣ’ ಎಂಬ ಸವಾಲು ಎದುರಾಯಿತು.
ಕೆಲವೊಮ್ಮೆ ವಿಚಿತ್ರ ಮುಜುಗರಗಳಾಗುತ್ತವೆ. ಸಾಹಿತ್ಯ ಕೃತಿಗಳನ್ನು ಹೀಗೇ ಅಂತ ವಿವರಿಸುವುದು ಕಷ್ಟ. ಅದು ಪ್ರೀತಿಯ ಹಾಗೆ. ನೀನು ಅವಳನ್ನೇ ಯಾಕೆ ಪ್ರೀತಿಸುತ್ತೀಯಾ ಎಂಬ ಪ್ರಶ್ನೆಗೆ ಇನ್ನೊಬ್ಬರಿಗೆ ಒಪ್ಪಿಗೆಯಾಗುವಂಥ ಉತ್ತರ ಕೊಡುವುದಂತೂ ಸಾಧ್ಯವೇ ಇಲ್ಲ. ಯಾಕೆಂದರೆ ನಾವು ಯಾಕೆ ಪ್ರೀತಿಸುತ್ತೇವೆ ಎಂಬ ಪ್ರಶ್ನೆಯನ್ನು ನಾವೇ ಕೇಳಿಕೊಂಡಿರುವುದಿಲ್ಲ. ವಿಮರ್ಶೆ ಮತ್ತು ಮೆಚ್ಚುಗೆಗೆ ಇರುವ ವ್ಯತ್ಯಾಸ ಅದೇ. ವಿಮರ್ಶೆ ತಾರ್ಕಿಕ ನಿಲುವುಗಳನ್ನು ಬೇಡುತ್ತದೆ. ಮೆಚ್ಚುಗೆ ಬದುಕಿನಿಂದ ಹುಟ್ಟಿದ್ದಾಗಿರುತ್ತದೆ. ಸಾಹಿತ್ಯ ಜೀವಿಸುವುದು ಮೆಚ್ಚುಗೆಯಲ್ಲೇ ಹೊರತು, ವಿಮರ್ಶೆಯಲ್ಲಿ ಅಲ್ಲ.
ತುಘಲಕ್ ಕೂಡ ಹಾಗೆ ಅಕಾರಣವಾಗಿ ಪ್ರೀತಿಸಬಲ್ಲಂಥ ಕೃತಿ. ಗಿರೀಶ ಕಾರ್ನಾಡರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕ ಲೇಖಕರು ಅವರು ಕೇವಲ ನಾಟಕ ಬರೆದವರಲ್ಲವೇ? ನಾಟಕ ಬರೆದದ್ದಕ್ಕೆ ಜ್ಞಾನಪೀಠ ಪ್ರಶಸ್ತಿ ಕೊಡುವುದು ಸರಿಯೇ ಎಂದೆಲ್ಲ ಗೊಣಗಿಕೊಂಡಿದ್ದರು. ಇವತ್ತೂ ಆ ಪ್ರಶ್ನೆಯನ್ನು ಕೇಳುವ ಯುವ ಲೇಖಕರಿದ್ದಾರೆ.
ಅದಕ್ಕೊಂದು ಕಾರಣವೂ ಇದೆ. ನಾಟಕ ಓದಿಕೊಳ್ಳುವ ಸಾಹಿತ್ಯ ಪ್ರಕಾರ ಅಲ್ಲ. ಅದು ರಂಗಕ್ರಿಯೆಯಲ್ಲಿ ಮೈತಳೆಯಬೇಕಾದದ್ದು. ಹಾಗೆ ರಂಗದ ಮೇಲೆ ಪ್ರದರ್ಶಿತಗೊಳ್ಳುವ ಸೌಭಾಗ್ಯ ಎಲ್ಲ ನಾಟಕಗಳಿಗೂ ಸಿಗುವುದಿಲ್ಲ. ಮತ್ತು ಪ್ರದರ್ಶಿತಗೊಂಡ ನಾಟಕಗಳನ್ನು ನೋಡುವ ಅವಕಾಶ ಎಲ್ಲ ಪ್ರದೇಶದ ಮಂದಿಗೂ ಲಭ್ಯವಾಗುವುದಿಲ್ಲ. ಹೀಗಾಗಿ ರಾಜಧಾನಿಯಲ್ಲಿ ತುಂಬ ಜನಪ್ರಿಯತೆ ಗಳಿಸಿದ ನಾಟಕ, ಗ್ರಾಮೀಣ ಪ್ರದೇಶಗಳ ಮಂದಿಗೆ ಗೊತ್ತೇ ಇರುವುದಿಲ್ಲ. ಕಾರ್ನಾಡರ ವಿಚಾರದಲ್ಲಿ ಆದದ್ದೂ ಅದೇ, ಅವರ ಅತ್ಯಂತ ಜನಪ್ರಿಯ ನಾಟಕಗಳು ನಮ್ಮೂರಿನ ಮಂದಿಗೆ ಗೊತ್ತಿಲ್ಲ. ಕಾರಂತರ ಕಾದಂಬರಿಗಳ ಹಾಗೆ ಅವು ಓದಿಸಿಕೊಳ್ಳಲಿಲ್ಲ. ಕುವೆಂಪು ಕವಿತೆಗಳ ಹಾಗೆ ಹಾಡಿಗೆ ಸಿಲುಕಲಿಲ್ಲ. ಮಾಸ್ತಿಯವರ ಕತೆಗಳಂತೆಯೋ ಅನಂತಮೂರ್ತಿಯವರ ಮಾತು-ಕೃತಿಗಳಂತೆಯೋ ಬೇಂದ್ರೆಯವರ ಕಾವ್ಯದ ಹುಚ್ಚಿನಂತೆಯೋ ಕಾರ್ನಾಡರು ಎಲ್ಲರಿಗೂ ಒದಗಲಿಲ್ಲ.
ಅವರ ಕುರಿತಾದರೂ ಯಾರಿಗೆ ಗೊತ್ತಿತ್ತು ಹೇಳಿ. ಉಡುಪಿ ಕುಂದಾಪುರದ ನಡುವಿರುವ ಕಾರ್ನಾಡು, ಗಿರೀಶರ ಊರು ಎಂದೇ ಅನೇಕರು ಭಾವಿಸಿದ್ದೆವು. ಕಾರ್ನಾಡು ಸದಾಶಿವರಾಯರು ಗಿರೀಶರ ಸಂಬಂಧಿ ಎಂದುಕೊಂಡಿದ್ದೆವು. ಗಿರೀಶ ಕಾರ್ನಾಡರು ಯಾವತ್ತೂ ತನ್ನ ಬಗ್ಗೆ ಹೇಳಿಕೊಂಡವರೂ ಅಲ್ಲ, ಬರೆದುಕೊಂಡವರೂ ಅಲ್ಲ. ವಿವೇಕ ಶಾನುಭಾಗರ ಕೃಪೆಯಿಂದ ಅವರ ಆತ್ಮಚರಿತ್ರೆಯ ಎರಡು ಅಧ್ಯಾಯಗಳು ಓದಲಿಕ್ಕೇ ಸಿಕ್ಕಿದುವಲ್ಲ, ಆಗಲೇ ಅವರ ಬಾಲ್ಯ ಯೌವನಗಳ ಕುರಿತು ನಮಗೊಂದಷ್ಟು ವಿವರಗಳು ಸಿಕ್ಕಿದ್ದು.
ಅದಕ್ಕೂ ಮುಂಚೆ ಕಾರ್ನಾಡರು ಪರಿಚಿತರಾದದ್ದು ಅವರ ನಾಟಕ, ಸಿನಿಮಾಗಳ ಮೂಲಕ. ಒಂದಾನೊಂದು ಕಾಲದಲ್ಲಿ, ಕಾಡು ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ ಅವರು ನಮ್ಮ ಮನಸ್ಸಿನಲ್ಲಿ ಅಚ್ಚಳಿಯಂತೆ ಉಳಿದದ್ದು ಪ್ರಾಣೇಶಾಚಾರ್ಯರ ಪಾತ್ರದಲ್ಲಿ. ನಾರಣಪ್ಪ ಸತ್ತನೆಂದು ಗೊತ್ತಾದ ತಕ್ಷಣ ಊಟವನ್ನು ಹಾಗೇ ಬಿಟ್ಟು ಆಪೋಶನ ತೆಗೆದುಕೊಂಡು ಏಳುವ ಚಿತ್ರವೊಂದು ಇವತ್ತಿಗೂ ನನ್ನ ಮನಸ್ಸಿನಲ್ಲಿದೆ. ಆಮೇಲೆ ಆನಂದಭೈರವಿ ಎಂಬ ಚಿತ್ರದಲ್ಲಿ ಕಾರ್ನಾಡರು ನಾಟ್ಯಾಚಾರ್ಯರಾಗಿ ನಟಿಸಿದ್ದರು. ಆ ಪಾತ್ರವೂ ಕಣ್ಮುಂದೆ ಹಸಿರು.
ಮೂಲತಃ ಪತ್ರಕರ್ತರಾದ ನಮಗೆಲ್ಲ ಕಾರ್ನಾಡರ ಮೇಲೆ ಸಿಟ್ಟು. ಅವರು ಯಾವತ್ತೂ ಹೇಳಿಕೆಗಳನ್ನು ಕೊಟ್ಟವರಲ್ಲ. ಸಾಹಿತ್ಯ ಸಮ್ಮೇಳನದ ಬಗ್ಗೆ ನಿಮಗೇನು ಅನ್ನಿಸುತ್ತದೆ ಎಂದು ಕೇಳಿದರೆ ನೋ ಕಾಮೆಂಟ್ಸ್ ಎಂದು ಹೇಳಿ ಫೋನಿಟ್ಟುಬಿಡುತ್ತಿದ್ದರು. ಎಷ್ಟೋ ಸಾರಿ ಫೋನಿಗೂ ಸಿಗುತ್ತಿರಲಿಲ್ಲ. ಯಾವುದಾದರೂ ಸಮಾರಂಭಕ್ಕೆ ಕರೆದರೆ ಕಠೋರವಾಗಿ ನಿರಾಕರಿಸುತ್ತಿದ್ದರು. ಏನನ್ನಾದರೂ ಬರೆದುಕೊಡಿ ಎಂದರೆ ನಾನು ಬೇರೇನೋ ಮಾಡುತ್ತಿದ್ದೇನೆ ಬಿಡುವಿಲ್ಲ ಎಂದು ನಿರ್ದಾಕ್ಷಿಣ್ಯವಾಗಿ ಹೇಳುತ್ತಿದ್ದರು. ಅವರ ದನಿಯಲ್ಲಿ ದ್ವಂದ್ವವನ್ನು ನಾನಂತೂ ಕಂಡೇ ಇಲ್ಲ. ಕಾರ್ಯಕ್ರಮಕ್ಕೆ ಬನ್ನಿ ಎಂದು ಕರೆದರೂ ಅವರದು ಅದೇ ಉತ್ತರ. ನಾನು ಬರುವುದಕ್ಕಾಗುವುದಿಲ್ಲ. ಮತ್ತೆ ಫೋನಿಸುವ ಅಗತ್ಯವಿಲ್ಲ. ನಮಸ್ಕಾರ. ಹೀಗಾಗಿ ಅವರು ಸಾಹಿತ್ಯ ಜಗತ್ತಿನಿಂದ ಹೊರಗೇ ಉಳಿಯಲು ಬಯಸುತ್ತಾರೆ ಎಂದು ನಾವೆಲ್ಲ ಅವರನ್ನು ಅಸೂಯೆ ಮತ್ತು ಸಿಟ್ಟಿನಿಂದ ನೋಡುತ್ತಿದ್ದೆವು.
ಚಿತ್ರರಂಗದ ಮಿತ್ರರೂ ಅವರ ಬಗ್ಗೆ ಕತೆ ಹೇಳುತ್ತಿದ್ದರು. ವಿಪರೀತ ಸಂಭಾವನೆ ಕೇಳುತ್ತಾರೆ ಎಂಬುದು ಅಂಥ ಅಪಾದನೆಗಳಲ್ಲಿ ಪ್ರಮುಖವಾದದ್ದು. ಕನ್ನಡ ನಿರ್ಮಾಪಕರ ರೀತಿನೀತಿಗಳು ತಿಳಿದ ನಂತರ ಕಾರ್ನಾಡರು ಸರಿ ಎಂಬ ತೀರ್ಮಾನಕ್ಕೆ ನಾವು ಬರದೇ ಬೇರೆ ದಾರಿಯೇ ಇರಲಿಲ್ಲ.
ನಿರ್ಮಾಪಕರೊಬ್ಬರು ಒಂದು ಟೀವಿ ಸೀರಿಯಲ್ಲು ಆರಂಭಿಸಿದ ದಿನಗಳಲ್ಲಿ ಅದರಲ್ಲಿ ಪ್ರಮುಖ ಪಾತ್ರವಾಗಿ ನಟಿಸಲು ಕಾರ್ನಾಡರು ಒಪ್ಪಿದ್ದರು. ಅವರನ್ನು ಆಗ ಭೇಟಿಯಾಗಲು ಅವಕಾಶ ಸಿಕ್ಕಿತ್ತು. ಕಾರ್ನಾಡರು ತಮ್ಮ ಎಂದಿನ ಗಡಸು ದನಿಯಲ್ಲಿ ತಮ್ಮ ಸಂಭಾವನೆಯನ್ನು ಸೂಚಿಸಿದ್ದರು. ನಾವು ಕತೆ ಹೇಳಲು ಯತ್ನಿಸಿದಾಗ, ಅದೇನೂ ಬೇಕಾಗಿಲ್ಲ. ಒಂಬತ್ತು ಗಂಟೆಗೆ ಬರುತ್ತೇನೆ. ನಿಮ್ಮ ವಸ್ತ್ರವಿನ್ಯಾಸಕನಿಗೆ ಬಂದು ಬಟ್ಟೆಯ ಅಳತೆ ತೆಗೆದುಕೊಂಡು ಹೋಗಲು ಹೇಳಿ ಎಂದಿದ್ದರು. ಕತೆ ಹೇಗಿರಬೇಕು ಎಂದು ಕೇಳಿದ್ದಕ್ಕೆ ಅದು ನಿಮ್ಮ ಜವಾಬ್ದಾರಿ, ನಾನೇ ಕತೆ ಹೇಗಿರಬೇಕು ಎಂದು ಹೇಳುವುದಾದರೆ, ನಾನೇ ಸೀರಿಯಲ್ ಮಾಡುತ್ತಿದ್ದೆ ಎಂದು ನಕ್ಕಿದ್ದರು. ಅದರ ನಿರ್ಮಾಪಕರಿಗೆ ಕಾರ್ನಾಡರ ಕುರಿತು ಏನೇನೂ ಗೊತ್ತಿರಲಿಲ್ಲ. ದೊಡ್ಡ ಮೊತ್ತದ ಸಂಭಾವನೆ ಕೊಟ್ಟ ಕಾರಣಕ್ಕೆ ಮೊದಲ ದಿನವೇ ಅವರು ಬೆಳಗ್ಗೆ ಒಂಬತ್ತರಿಂದ ರಾತ್ರಿ ಒಂಬತ್ತರ ತನಕ ಮೂರು ನಾಲ್ಕು ಪುಟಗಳ ಐದೋ ಆರೋ ದೃಶ್ಯಗಳನ್ನು ಚಿತ್ರೀಕರಿಸಿ ಕಾರ್ನಾಡರನ್ನು ಸುಸ್ತುಮಾಡಿಬಿಟ್ಟಿದ್ದರು. ಆವತ್ತು ಶೂಟಿಂಗಿನಿಂದ ಮರಳಿದವರು ಮತ್ತೆ ಆ ಸೆಟ್ಟಿನ ಕಡೆ ತಲೆ ಹಾಕಲಿಲ್ಲ. ನಿರ್ಮಾಪಕರನ್ನು ಕರೆದು ತೆಗೆದುಕೊಂಡ ಮುಂಗಡಹಣವನ್ನು ವಾಪಸ್ಸು ಕೊಟ್ಟು ಸುಮ್ಮನಾದರು. ಮತ್ತೆಂದೂ ಸೀರಿಯಲ್ಲು ಜಗ್ತತ್ತಿಗೆ ಕಾಲಿಡುವುದಿಲ್ಲ ಎಂದು ಆವತ್ತೇ ಅವರು ನಿರ್ಧಾರ ಮಾಡಿರಬೇಕು.
ಕಾರ್ನಾಡರ ಗೆಳೆಯರು ಯಾರು, ಆಪ್ತರು ಯಾರು, ಅವರು ಏನು ಓದುತ್ತಾರೆ, ಬಿಡುವಿನ ವೇಳೆಯಲ್ಲಿ ಏನು ಮಾಡುತ್ತಾರೆ ಎಂಬುದು ಇವತ್ತಿಗೂ ನಿಗೂಢ. ಹೊಸ ಗೆಳೆಯರನ್ನು ಅವರು ಸಂಪಾದಿಸಿದಂತಿಲ್ಲ. ಹಳೆ ಗೆಳೆಯರ ಜೊತ ಜಗಳ ಕಾದ ಸುದ್ದಿಯೂ ಇಲ್ಲ. ಅವರು ಫೇಸ್ ಬುಕ್ಕಿನಲ್ಲಾಗಲೀ, ಆರ್ಕುಟ್‍ನಲ್ಲಾಗಲೀ ಸಿಗುವುದಿಲ್ಲ.
ಅವರಾಗೇ ಫೋನ್ ಮಾಡಿ ಮಾತಾಡುತ್ತಿದ್ದವರು ವೈಎನ್‍ಕೆ. ನಾನು ಗಿರೀಶ್ ಎಂದು ಮಾತು ಶುರು ಮಾಡುತ್ತಿದ್ದ ಗಿರೀಶರ ಪ್ರತಿಭೆಯ ಕುರಿತು ವೈಯೆನ್ಕೆ ಬಾಯ್ತುಂಬ ಮಾತಾಡುತ್ತಿದ್ದರು. ಅವರು ಹೇಳಿದ ಗಿರೀಶರ ಗುಣಗಳಲ್ಲಿ ಗಮನಾರ್ಹವಾದದ್ದು ಕಾರ್ನಾಡರಿಗಿರುವ ಏಕಾಗ್ರತೆ. ತುಂಬ ತನ್ಮಯರಾಗಿ ಅವರು ಮಾಡಬೇಕಾದ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ ಮತ್ತು ಅದರ ಕಡೆಗೇ ಫೋಕಸ್ ಆಗಿರುತ್ತಾರೆ. ಬೇರೆ ದಿಕ್ಕಿಗೆ ಅವರ ಕಣ್ಣೆತ್ತಿಯೂ ನೋಡುವುದಿಲ್ಲ. ಹೀಗಾಗಿಯೇ ಅವರು ಅಷ್ಟೊಂದು ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ ಎನ್ನುತ್ತಿದ್ದರು ವೈಯೆನ್ಕೆ.
ಒಮ್ಮೆ ಕಾರ್ನಾಡರ ಮನೆಗೆ ಹೋದಾಗ ಅವರ ಪುಟ್ಟ ಆಫೀಸು ಗಮನ ಸೆಳೆದಿತ್ತು. ಒಂದು ಫೋನು, ಫ್ಯಾಕ್ಸು, ಪ್ರಿಂಟರ್ ಮತ್ತು ಕಂಪ್ಯೂಟರ್ ಇಟ್ಟುಕೊಂಡು ಓದುತ್ತಿದ್ದ ಪುಸ್ತಕಗಳನ್ನು ಪಕ್ಕದಲ್ಲಿಟ್ಟುಕೊಂಡು ಗಿರೀಶ್ ಕೂತಿದ್ದರು. ನಾವು ಯಾವುದೋ ವಿಶೇಷಾಂಕಕ್ಕೆ ಕತೆ ಕೇಳಲು ಹೋಗಿದ್ದೆವು. ವೈಯೆನ್ಕೆ ಆ ಕುರಿತು ಮೊದಲೇ ಮಾತಾಡಿದ್ದರಿಂದ ನಮಗೆ ಒಳಗೆ ಪ್ರವೇಶ ಸಿಕ್ಕಿತ್ತು. ಬರೆದಿಟ್ಟ ಕತೆಯನ್ನು ಕೊಟ್ಟು ಅವರು ಹೋಗಿ ಬನ್ನಿ ಅಂದಿದ್ದರು.
ಕಾರ್ನಾಡರ ಐವತ್ತು ವರ್ಷಗಳ ಲೇಖನಗಳ ಸಂಕಲನ ಆಗೊಮ್ಮೆ ಈಗೊಮ್ಮೆ. ಅದನ್ನು ಎರಡನೆ ಸಲ ಓದಿದಾಗ ಅಚ್ಚರಿಯಾಯಿತು. ಸ್ಪಷ್ಟ ಚಿಂತನೆಯ, ಅನ್ನಿಸಿದ್ದನ್ನು ತುಂಬ ಸರಳವಾಗಿ ಸರಾಗವಾಗಿ ಮತ್ತು ಗೊಂದಲವೇ ಇಲ್ಲದಂತೆ ಹೇಳುವ ಕಾರ್ನಾಡರ ಪರಿಚಯವನ್ನು ಈ ಸಂಕಲನ ಮಾಡಿಕೊಡುತ್ತದೆ. ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಭಾಷಣದಲ್ಲಿ ಅವರು ನಾಗರಿಕ ಮತ್ತು ಸೈನಿಕ ಪರಿಕಲ್ಪನೆಯ ಕುರಿತು ಮಾತಾಡಿದ್ದಾರೆ. ಅಲ್ಲಿ ಅವರ ನಿಲುವು ಅತ್ಯಂತ ಸ್ಪಷ್ಟವಾಗಿ ಗೊತ್ತಾಗುತ್ತದೆ. ಅವರು ಎಂಥ ಮಾನವತಾವಾದಿ ಎನ್ನುವುದನ್ನೂ ಆ ಭಾಷಣ ಹೇಳುತ್ತದೆ. ಅಲ್ಲಿರುವ ನಾಲ್ಕು ಸಾಲುಗಳನ್ನು ನೋಡಿ-
ಸೈನಿಕನಂತೆ ವರ್ತಿಸುವುದರಿಂದ ನಾಗರಿಕನಿಗೆ ಸಿಗುವ ಅತಿದೊಡ್ಡ ಮಾನಸಿಕ ತೃಪ್ತಿಯೆಂದರೆ ಅವನು ಎಲ್ಲ ಸಾಮಾಜಿಕ, ನೈತಿಕ ಜವಾಬುದಾರಿಗಳಿಂದ ಪಾರಾಗುತ್ತಾನೆ. ಮನುಷ್ಯತ್ವದ ಅತ್ಯಂತ ಮಹತ್ವದ ಕುರುಹು ಎಂದರೆ ಆಯ್ಕೆ ಮಾಡುವ ಸ್ವಾತಂತ್ರ್ಯ. ನನ್ನ ನೈತಿಕ ಮೌಲ್ಯಗಳನ್ನು ನಾನು ನನ್ನ ಅಂತರಂಗದಿಂದ ಸೃಷ್ಟಿಸಬೇಕು.
ಸಂದರ್ಶನ, ಲೇಖನ, ಕತೆ, ನಾಟಕದ ಕುರಿತು ಅನಿಸಿಕೆ ಇವೆಲ್ಲ ತುಂಬಿರುವ `ಆಗೊಮ್ಮೆ ಈಗೊಮ್ಮೆ’ ಕಳೆದ ಎರಡು ವಾರಗಳಿಂದ ನನ್ನನ್ನು ಹಿಡಿದಿಟ್ಟಿದೆ. ಕಾರ್ನಾಡರನ್ನು ಬೇರೆಯೇ ಆಗಿ ನೋಡುವುದನ್ನು ಕಲಿಸಿದೆ. ಗೆಳೆಯರಾದ ಸುರೇಂದ್ರನಾಥ್ ಅಚ್ಚರಿಯಿಂದ ಹೇಳುತ್ತಿರುತ್ತಾರೆ- ನನಗೆ ಕಾರ್ನಾಡರೂ ಶ್ರೀನಿವಾಸ ವೈದ್ಯರೂ ಮಾತಾಡುವುದನ್ನು ಕೇಳಿದಾಗ ಆಶ್ಚರ್ಯವಾಗುತ್ತದೆ. ನೀನು ಅವನು ಅಂತ ಏಕವಚನದಲ್ಲಿ ಧಾರವಾಡ ಭಾಷೆಯಲ್ಲಿ ಮಾತಾಡಿಕೊಳ್ಳುತ್ತಿರುತ್ತಾರೆ. ಅಂಥ ಹಿರಿಯರಿಬ್ಬರು ಹಾಗೆ ಮಾತಾಡುವುದನ್ನು ನೋಡುವುದೇ ಒಂದು ಚಂದ.
ಕಾರ್ನಾಡರೂ ಹಿರಿಯರಾ? ಹುಡುಕಿದರೆ ಗೊತ್ತಾದದ್ದು ಕಾರ್ನಾಡರಿಗೆ ಎಪ್ಪತ್ತೆರಡು.

Sunday, November 21, 2010

ಬೇಡ

ಇಲ್ಲಿ ವಿಸರ್ಜನೆ ಮಾಡಬಾರದು. ಅಲ್ಲಿ ಕಾಲಿಡಬಾರದು. ಈ ರಸ್ತೆಯಲ್ಲಿ ವಾಪಸ್ಸು ಬರಬಾರದು. ಅಲ್ಲಿ ಕಾರು ನಿಲ್ಲಿಸಬಾರದು. ಮತ್ತೆಲ್ಲೋ ನಿಲ್ಲುವಂತಿಲ್ಲ. ಇನ್ನೆಲ್ಲೋ ಮಲಗಬಾರದು. ಕಾರಲ್ಲಿ ಪ್ರೀತಿ ಮಾಡಬಾರದು. ದೇವಸ್ಥಾನದ ಮುಂದೆ ಸಿಗರೇಟು ಸೇದಬಾರದು. ಒಳಾಂಗಣದಲ್ಲಿ ಕಾಲು ಇಳಿಬಿಟ್ಟು ಕೂರಬಾರದು. ಅಂಗಿ ಬನೀನು ಹಾಕಿಕೊಂಡು ಗರ್ಭಗುಡಿಯನ್ನು ಪ್ರವೇಶಿಸಬಾರದು. ಸತ್ಯನಾರಾಯಣ ಪೂಜೆ ಪ್ರಸಾದ ನಿರಾಕರಿಸಬಾರದು. ಅಯ್ಯಪ್ಪನ ದರ್ಶನಕ್ಕೆ ಹೋಗುವವರು ಕುರಿಕೋಳಿ ತಿನ್ನಬಾರದು. ರಾಘವೇಂದ್ರಸ್ವಾಮಿ ಭಕ್ತರು ಗುರುವಾರ ಊಟ ಮಾಡಬಾರದು. ಚೌಡೇಶ್ವರಿ ಆರಾಧಕರು ಶನಿವಾರ ಕುಡೀಬಾರದು. ಮನೆಬಿಟ್ಟು ಹೋಗುವಾಗ ಎಲ್ಲಿಗೆ ಅಂತ ಕೇಳಬಾರದು. ಹೆಣ್ಮಕ್ಕಳು ಬೋಳುಹಣೆಯಲ್ಲಿ ಇರಬಾರದು. ರಾತ್ರಿ ತಲೆ ಬಾಚಬಾರದು. ಬಟ್ಟೆ ಹೊಲಿಯಬಾರದು....

ನೂರೆಂಟು ರಾಮಾಯಣ. ಎಲ್ಲಿಗೆ ಹೋದರೂ ಇಂಥದ್ದೆ ನಿಯಮ, ನೀತಿ. ಒಂದಲ್ಲ ಎರಡಲ್ಲ. ಕೆಲವು ಕಾನೂನು ಕೊಟ್ಟದ್ದು, ಕೆಲವು ಪರಂಪರೆ ಬಿಟ್ಟದ್ದು, ಕೆಲವು ಅಂಧಶ್ರದ್ಧೆ ಇಟ್ಟದ್ದು.

ಆಕಾಶವಾಣಿ ಕೇಳುತ್ತಿದ್ದರೆ ಮತ್ತೊಂದಷ್ಟು ಸಲಹೆ. ಹಿಂದೆ ನೋಡಿ ಮುಂದೆ ನೋಡಿ, ಮೇಲಕ್ಕೂ ಕೆಳಕ್ಕೂ ನೋಡಿ, ಅಪರಿಚಿತರಿಗೆ ಮನೆ ಕೊಡಬೇಡಿ, ನೀರು ಪೋಲು ಮಾಡಬೇಡಿ, ಎರಡೇ ಮಕ್ಕಳು ಮಾಡಿ, ಕುಡಿದು ವಾಹನ ಓಡಿಸಬೇಡಿ, ದೊಡ್ಡ ದನಿಯಲ್ಲಿ ಮಾತಾಡಬೇಡಿ, ಸಜ್ಜನಿಕೆಯಿಂದ ವರ್ತಿಸಿ, ನಮ್ಮ ದೇಶದ ಮಾನ ಉಳಿಸಿ, ಕರೆಂಟು ಉಳಿಸಿ, ಕಾಡು ಉಳಿಸಿ, ಪ್ರಾಣಿಗಳನ್ನು ಹಿಂಸಿಸಬೇಡಿ.

ಇಷ್ಟೇ ಅಲ್ಲ. ಕಳಬೇಡ ಕೊಲಬೇಡ ಹುಸಿಯನುಡಿಯಲು ಬೇಡ, ತನ್ನ ಬಣ್ಣಿಸಬೇಡ ಎಂಬುದರಿಂದ ಹಿಡಿದು ಹುಲ್ಲಿನ ಮೇಲೆ ನಡೆಯಬೇಡಿ, ಕಂಡಕಂಡಲ್ಲಿ ಉಗುಳಬೇಡಿ, ಹೆಂಡತಿಯನ್ನು ಹೊಡೆಯಬೇಡಿ, ಹೆತ್ತವರನ್ನು ಕಡೆಗಣಿಸಬೇಡಿ, ಪರಭಾಷಾ ಸಿನಿಮಾ ನೋಡಬೇಡಿ, ಇಂಗ್ಲಿಷ್ ಕಲಿಯಬೇಡಿ, ಕನ್ನಡ ಮರೆಯಬೇಡಿ, ಆಫೀಸಿಗೆ ರಜೆ ಹಾಕಬೇಡಿ, ದುಡಿಯಲು ಸೋಮಾರಿತನ ಮಾಡಬೇಡಿ, ಹಾದರ ಮಾಡದಿರಿ, ಜವಾಬ್ದಾರಿಯಿಂದ ತಪ್ಪಿಸಿಕೊಂಡು ಓಡದಿರಿ, ಮಹಿಳೆಯರನ್ನು ಕಾಡದಿರಿ, ಕೋತಿಗಳಿಗೆ ತಿಂಡಿತಿನಿಸು ನೀಡದಿರಿ...

ಎಷ್ಟೆಲ್ಲ ಬೇಡಗಳ ಮಧ್ಯೆ ಬದುಕುತ್ತಿದ್ದೇವೆ ಎನ್ನಿಸುತ್ತಿದೆ ಅಲ್ಲವೇ? ಪ್ರಶ್ನೆ ಅದಲ್ಲ. ನಮಗೆ ಇಷ್ಟೊಂದು ಕಟ್ಟುಪಾಡುಗಳು ಬೇಕಾ? ಇದನ್ನೆಲ್ಲ ನಿರ್ಧಾರ ಮಾಡುವವರು ಯಾರು? ಕಾನೂನೇ, ವ್ಯವಸ್ಥೆಯೇ, ಧರ್ಮವೇ, ಜಾತಿಯೇ, ಆಚಾರವೇ, ಮಾನವೀಯತೆಯೇ? ನಾವು ನಿಜಕ್ಕೂ ಅಷ್ಟೊಂದು ಮೂರ್ಖರೇ?

ಸುತ್ತ ನೋಡುತ್ತಿದ್ದರೆ ಗಾಬರಿಯಾಗುತ್ತದೆ. ಬಹುಶಃ ನಾವು ಅತ್ಯಂತ ನಾಗರಿಕರಂತೆ ನಟಿಸುತ್ತಿದ್ದೇವೋ ಏನೋ? ಸಹಾನುಭೂತಿ, ಅನುಕಂಪ, ಕರುಣೆಯ ಮಾತು ಹಾಗಿರಲಿ. ರಸ್ತೆಯಲ್ಲಿ ಎಲ್ಲರಿಗೂ ತೊಂದರೆ ಆಗುವಂತೆ ವಾಹನ ನಿಲ್ಲಿಸಬಾರದು ಎನ್ನುವ ಕನಿಷ್ಟ ತಿಳುವಳಿಕೆಯನ್ನು ನೀಡುವುದಕ್ಕೂ ಕಾನೂನೇ ಬೇಕಾ? ಹಾಗಿದ್ದರೆ ನಮ್ಮ ಶಿಕ್ಷಣ ನಮಗೆ ಕೊಟ್ಟದ್ದೇನು? ಸಂಸ್ಕಾರ ಅನ್ನುವ ಮಾತಿಗೆ ಅರ್ಥವೇನು? ಮೊದಲ ಗುರು ತಾಯಿ, ನಂತರದ ಗುರು ತಂದೆ, ಆಮೇಲಿನ ಗುರು ಆಚಾರ್ಯ, ಇದರೊಟ್ಟಿಗೇ ರಕ್ತಗತವಾಗಿ ಬಂದಿದೆ ಎಂದು ನಂಬಲಾಗುತ್ತಿರುವ ಉತ್ತಮ ಸಂಸ್ಕಾರ- ಇವೆಲ್ಲವನ್ನೂ ಮೀರಿದ್ದು ಮೂಲಪ್ರವೃತ್ತಿಯಲ್ಲವೇ?

ಹಾಗಿದ್ದರೆ ಮೂಲಪ್ರವೃತ್ತಿ ಏನು? ಆಹಾರ, ನಿದ್ರೆ, ಮೈಥುನ. ಅಷ್ಟೇ ಸಾಕೆಂದಿದ್ದವರಿಗೆ ಹೊಸದಾಗಿ ಶುರುವಾಗಿದೆ ಬೇಸರ. ಮತ್ತೆಲ್ಲಿಗೋ ಹೋಗುವ, ಮತ್ತೇನನ್ನೋ ಮುಟ್ಟುವ ಆಸೆ. ಅನನ್ಯವಾಗುವ, ವಿಭಿನ್ನವಾಗುವ, ಬೇರೆಯೇ ಆಗುವ ಹೆಬ್ಬಯಕೆ. ಹೀಗೆ ಬೇರೆಯೇ ಆಗುವ ಆಸೆಗೆ ನೂರೆಂಟು ಹುನ್ನಾರ.

ಎಲ್ಲರೂ ಸಮಾನರು ಎಂದು ನಾವೆಷ್ಟೇ ಹೇಳಿಕೊಂಡರೂ ಅಸಾಮಾನ್ಯನಾಗುವ ಆಸೆ ಬಿಡುವುದಿಲ್ಲ. ಕುರಿಮಂದೆಯಲ್ಲಿ ನೂರು ಕುರಿಯಿರುತ್ತದೆ ಅಂತಿಟ್ಟುಕೊಳ್ಳಿ. ಪ್ರತಿಯೊಂದು ಕುರಿಗೂ ತಾನು ಕುರಿಯೆಂಬುದು ಗೊತ್ತು. ಅದು ಕುರಿಯಂತೆಯೇ ವರ್ತಿಸುತ್ತದೆ. ಕುರಿಯ ಹಾಗೇ ತಲೆತಗ್ಗಿಸಿ ನಡೆಯುತ್ತದೆ. ತುಪ್ಪಳ ಬೆಳೆಸಿ ಅದನ್ನು ಸವರಿ ಮಾರಿದರೂ ಅದಕ್ಕೆ ಆ ಕುರಿತು ಹೆಮ್ಮೆಯೂ ಇಲ್ಲ, ಬೇಸರವೂ ಇಲ್ಲ. ನಾವೂ ಅಷ್ಟೇ, ಹೆಚ್ಚು ತುಪ್ಪಳವನ್ನು ಕೊಡುವ ಕುರಿಯನ್ನು ಹೆಚ್ಚು ಗೌರವದಿಂದ ಕಾಣುತ್ತೇವಾ? ಅದೂ ಇಲ್ಲ. ಅದು ಕೂಡ ಒಂದು ಕುರಿ ಅಷ್ಟೇ.

ನಾವು ಹಾಗಲ್ಲ. ಎಲ್ಲರಿಗೂ ಮಾತು ಬರುತ್ತದೆ. ಕೆಲವರು ಚೆನ್ನಾಗಿ ಮಾತಾಡುತ್ತಾರೆ. ಎಲ್ಲರೂ ಬರೆಯುತ್ತಾರೆ, ಕೆಲವರು ಚೆನ್ನಾಗಿ ಬರೆಯುತ್ತಾರೆ. ಎಲ್ಲರೂ ಮನುಷ್ಯರೇ, ಆದರೆ ಕೆಲವರು ಸುಂದರವಾಗಿರುತ್ತಾರೆ. ಹೀಗೆ ನಮ್ಮನ್ನು ಒಡೆಯುವುದಕ್ಕೆ ಪ್ರತಿಭೆ, ಸಂಪತ್ತು, ಸೌಂದರ್ಯ, ಜಾತಿ, ಅಧಿಕಾರ ಎಂಬ ಐದು ಕೊಡಲಿಗಳು ಕಾದು ಕೂತಿವೆ. ಇವುಗಳಲ್ಲಿ ಯಾವ ಕೊಡಲಿಯನ್ನು ಕೈಗೆತ್ತಿಕೊಂಡರೂ ಸಾಕು, ಅವು ಮಾನವ ಸರಪಳಿಯನ್ನು ತುಂಡರಿಸುತ್ತವೆ. ಕ್ರಮೇಣ ಈ ಐದರ ಪೈಕಿ ಒಂದು ಗುಣ ಗುಲಗಂಜಿ ತೂಕ ಹೆಚ್ಚಿದ್ದರೂ ಕೂಡ, ಅಂಥವನು ಎತ್ತರದಲ್ಲಿ ನಿಲ್ಲುತ್ತಾನೆ. ತನ್ನವರು ತುಂಬ ಕೆಳಗಿದ್ದಾರೆ ಎಂದು ಭಾವಿಸುತ್ತಾನೆ.

ಈ ವೈಚಿತ್ರ್ಯವನ್ನು ಗಮನಿಸಿದ್ದು ಕಾಮರಾಜ ಮಾರ್ಗ’ ಕಾದಂಬರಿಯ ಪುಟಗಳನ್ನು ತಿರುವಿಹಾಕುತ್ತಾ ಹೋದಾಗ. ತುಂಬ ನಿರ್ಬಿಢೆಯಿಂದ ಸಾಗುವ ಕಾದಂಬರಿಗೆ ವಿಷಾದದ ತೆಳುವಾದ ಲೇಪವೂ ಇದ್ದಂತಿದೆ. ಅಲ್ಲಿ ತನ್ನ ಚೆಲುವನ್ನು ಬಳಸುವ ಸುಂದರಿಯರಿದ್ದಾರೆ. ಹಾಗೇ, ತನ್ನ ದೇಹವನ್ನು ಬೇರೊಬ್ಬರು ಬಳಸಿಕೊಂಡಾಗ ನರಳುವವರೂ ಎದುರಾಗುತ್ತಾರೆ. ಅಧಿಕಾರಕ್ಕೆ ಸಮೀಪ ಇರುವ ಸಲುವಾಗಿ ಸೌಂದರ್ಯ, ಜಾತಿ, ಪ್ರತಿಭೆ ಮತ್ತು ಸಂಪತ್ತನ್ನು ಒತ್ತೆಯಿಟ್ಟವರೂ ಕಾಣಸಿಗುತ್ತಾರೆ. ಅವರೆಲ್ಲರೂ ಅಂತಿಮವಾಗಿ ಸಾಧಿಸಹೊರಟಿದ್ದಾದರೂ ಏನನ್ನು ಎಂಬ ಪ್ರಶ್ನೆಯನ್ನು ಕಾಮರಾಜಮಾರ್ಗ’ ಮತ್ತೆ ಮತ್ತೆ ಕೇಳಿಕೊಳ್ಳುತ್ತದೆ.

ಏರುವ ಆಸೆ, ಜಾರುವ ಭಯ, ಆಳ ತಿಳಿಯದೆ ಧುಮುಕುವ ಹುಂಬತನ ಮತ್ತು ಸಾಹಸೀ ಪ್ರವೃತ್ತಿ, ಗೆಲ್ಲುವುದು ತನಗಷ್ಟೇ ಗೊತ್ತಿದೆ ಎಂಬ ಹಮ್ಮು, ನೀನು ಗೆದ್ದದ್ದೂ ಸುಳ್ಳು ಎಂಬಂತೆ ನಗುವ ಕನ್ನಡಿ. ಬದುಕಿಗೆ ಸೀಮೆಯಿಲ್ಲ, ಅದು ನಿಸ್ಸೀಮವೂ ಅಲ್ಲ. ಹೊಸಿಲಾಚೆಗೆ ಏನಿದೆ ಈಚೆಗೇನಿದೆ ಅನ್ನುವುದು ಹೊಸಿಲು ದಾಟುವ ಧಾವಂತದಲ್ಲಿ ನಮಗೆ ಗೊತ್ತಾಗುವುದೇ ಇಲ್ಲ. ಎಷ್ಟೋ ವರ್ಷಗಳ ನಂತರ ತಿರುಗಿ ನೋಡಿದರೆ ನಾವು ದಾಟಿದ್ದೇ ತಪ್ಪೇನೋ ಅನ್ನಿಸಿ ಬೇಸರವಾಗುತ್ತದೆ. ಆ ಕ್ಷಣದ ಜಿಗಿದು ದಾಟುವ ಹುರುಪು, ದಾಟಿದ ಹೆಮ್ಮೆ ಇವೆರಡನ್ನೂ ನೆನಪಿಸಿಕೊಳ್ಳುತ್ತಾ ಕಾಲ ಕಳೆಯುವುದಷ್ಟೇ ಉಳಿದಿರುತ್ತದೆ.

*********

ದೇವನೂರು ಮಹಾದೇವ ಕೂಡ `ಬೇಡ’ ಅಂದರು. ಕನ್ನಡದಲ್ಲಿ ಶಿಕ್ಷಣ ಕೊಡುವ ತನಕ ನೃಪತುಂಗ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಪತ್ರ ಬರೆದರು. ಅವರು ಹೇಳಿದ್ದು ಇಷ್ಟೇ:

ಅದೇನೂ ಸರ್ಕಾರಕ್ಕೆ ಆಗದ ಕೆಲಸವೇನೂ ಆಗಿರಲಿಲ್ಲ. ಪರಿಷತ್ತು ಕೂಡ ಸಾಹಿತ್ಯ ಸಮ್ಮೇಳನ ಮಾಡುವುದಿಲ್ಲ ಎಂದು ಸುಮ್ಮನಿರಬಹುದಾಗಿತ್ತು. ಆದರೆ ಪರಿಷತ್ತು ಕೂಡ ಸರ್ಕಾರವನ್ನು ಅರ್ಥ ಮಾಡಿಕೊಂಡಿದೆ. ಸಮ್ಮೇಳನ ನಡೆಸುವುದಿಲ್ಲ ಎಂದರೆ ಸರ್ಕಾರ ಬೇಡ ಬಿಡಿ’ ಎನ್ನಬಹುದು. ಒಂದು ವರ್ಷ ನಡೆಯದೇ ಹೋದರೆ ಮತ್ತೆಂದೂ ನಡೆಯದೇ ಇರಬಹುದು. ಅಲ್ಲಿಗೆ ಅನೇಕರು ನಿರುದ್ಯೋಗಿಗಳಾಗುತ್ತಾರೆ. ಕೋಟ್ಯಂತರ ರುಪಾಯಿಯ ವಹಿವಾಟು ನಿಂತುಹೋಗುತ್ತದೆ.

ಅದೆಲ್ಲವನ್ನು ಬದಿಗಿಟ್ಟು ನೋಡಿದರೂ ಬೇಸರ. ದೇವನೂರು ಮಹಾದೇವ ಅವರ ಹೇಳಿಕೆಗ ಸಾಹಿತ್ಯ ಜಗತ್ತಿನಲ್ಲಿ ದೊಡ್ಡ ಮಾನ್ಯತೆ ಸಿಗುತ್ತದೆ. ಸಾಹಿತಿಗಳೆಲ್ಲ ಒಗ್ಗೂಡುತ್ತಾರೆ. ಮಹಾದೇವ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡು ಸರ್ಕಾರದ ಜೊತೆಗೆ ವಾಗ್ವಾದಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷಿಸಿದರೆ, ಬೇಸರ ಕಾದಿದೆ. ಅಂಥದ್ದೇನೂ ಆಗಿಲ್ಲ. ಬೇಡವಾದರೆ ತಗೋಬೇಡಿ ಎಂದು ಪರಿಷತ್ತು ಪ್ರಶಸ್ತಿಯನ್ನು ಸಿಪಿಕೆಯವರಿಗೆ ಕೊಟ್ಟು ಸುಮ್ಮನಾಗಿದೆ. ದೇವನೂರರ ಜೊತೆಗಿದ್ದ ಕ್ರಾಂತಿಕಾರಿಗಳೂ, ಬಂಡಾಯಗಾರರೂ, ಸೈಜುಗಲ್ಲು ಹೊತ್ತೋರೂ ಸುಮ್ಮನಿದ್ದಾರೆ. ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು ಬಿಡಿ, ಒಂದು ಹೇಳಿಕೆಯೂ ಹೊರಬರಲಿಲ್ಲ. ಸರ್ಕಾರದ ಹಂಗಿನಲ್ಲಿ ಹೇಗೆ ಮಾತು ಉಡುಗಿ ಹೋಗುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಮಾತ್ರ.

ದೇವನೂರರು ಕೂಡ ಎಲ್ಲರಂತೆ ಪ್ರಶಸ್ತಿ ಸ್ವೀಕರಿಸಿ ವಿನಯವಂತಿಕೆ ಪ್ರದರ್ಶಿಸಬಹುದಾಗಿತ್ತು. ಭಾಷೆಯ ಪ್ರಸ್ತಾಪ ಮಾಡುವ ಅಗತ್ಯ ಅವರಿಗೇನೂ ಇರಲಿಲ್ಲ. ಅವರು ಮಹಾ ಶ್ರೀಮಂತರೇನೂ ಅಲ್ಲ. ಅವರ ಹೇಳಿಕೆ, ನಿಲುವು ಮತ್ತು ದಿಟ್ಟತನ ಒಂದು ಹೋರಾಟವನ್ನೇ ಹುಟ್ಟುಹಾಕಬಹುದಾಗಿತ್ತು.

ಮಾತು ಸೋತ ಭಾರತ ಎಂಬ ಅನಂತಮೂರ್ತಿಯವರ ರೂಪಕ ನಿಜವಾಗುತ್ತಿದೆ.

Tuesday, September 28, 2010

ಬಸ್ಸು ಕೆಟ್ಟು ನಿಂತ ಹನ್ನೆರಡು ಗಂಟೆ

ಹಬ್ಬಿದಾ ಮಲೆ. ಎಲ್ಲೆಲ್ಲೂ ಹಸಿರು. ಹಸಿರು ಬಯಲಲ್ಲಿ ಉಸಿರುಬಿಗಿಹಿಡಿದು ಓಡುತ್ತಿರುವ ಪುಟ್ಟ ಹುಡುಗ. ಅವನ ಹಿಂದೆ ಏದುಸಿರು ಬಿಟ್ಟುಕೊಂಡು ಓಟ ಕಿತ್ತಿರುವ ತಾಯಿ.
ಸಂಜೆಯಾಗುತ್ತಿತ್ತು. ನಾವು ಹೋಗುತ್ತಿದ್ದ ಬಸ್ಸು ಕೆಟ್ಟುನಿಂತು ಮೂರೋ ನಾಲ್ಕೋ ಗಂಟೆಯಾಗಿತ್ತು. ಆ ರಸ್ತೆಯಲ್ಲಿ ಬೇರೆ ಯಾವ ಬಸ್ಸೂ ಬರುವುದಿಲ್ಲ ಎಂದು ಕಂಡಕ್ಟರ್ ಆತಂಕದಲ್ಲಿದ್ದ. ಬಸ್ಸಿನಲ್ಲಿದ್ದ ಮೂವತ್ತೋ ಮೂವತ್ತೈದೋ ಪ್ರಯಾಣಿಕರ ಪೈಕಿ ಅನೇಕರು ಕಂಗಾಲಾಗಿದ್ದರು. ಥರಹೇವಾರಿ ಮಂದಿ. ದೂರಪ್ರಯಾಣಕ್ಕೆ ಹೊರಟವರು. ಸಿಗರೇಟು ಸೇದಲು ಹಂಬಲಿಸುವವರು. ಸಂಜೆ ತಿಂಡಿ ತಿಂದು ಔಷಧಿ ತೆಗೆದುಕೊಳ್ಳಬೇಕಾದವರು. ಯಾರನ್ನೋ ಸೇರಲು ಹೊರಟವರು. ಯಾರನ್ನೋ ಕರೆದುಕೊಂಡು ಹೊರಟವರು. ಮಾರನೆಯ ದಿನ ಪರೀಕ್ಷೆ ಬರೆಯಬೇಕಾದವರು. ವಿನಾಕಾರಣ ಬೇಗನೇ ಊರು ಸೇರಲೆಂದು ಹಂಬಲಿಸುವವರು. ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ವ್ಯಾಪಾರ. ಒಂದೊಂದು ನಿರೀಕ್ಷೆ.
ಬಸ್ಸು ಕೆಟ್ಟು ನಿಂತ ತಕ್ಷಣ ಆ ತಾಯಿಮಗು ಹಸಿರಿಗೆ ಹೊರಟು ಬಿಟ್ಟಿದ್ದರು. ಅವರಿಗೆ ಎಲ್ಲಿಗೂ ಹೋಗುವ ನಿರೀಕ್ಷೆ ಇದ್ದಂತಿರಲಿಲ್ಲ. ಬಸ್ಸು ಕೆಟ್ಟಿತೆಂಬ ಬೇಸರವೂ ಇದ್ದಂತೆ ಕಾಣಲಿಲ್ಲ. ಬಸ್ಸು ಬೇಗ ಹೊರಡಲಿ ಎಂಬ ಆತುರವೂ ಅವರಲ್ಲಿ ಕಾಣಿಸುತ್ತಿರಲಿಲ್ಲ. ಬಸ್ಸು ನಿಂತ ತಕ್ಷಣ, ಅದು ತಮಗೋಸ್ಕರವೇ ಕೆಟ್ಟು ನಿಂತಿದೆ ಎಂಬಂತೆ, ಹಾಗೆ ಕೆಟ್ಟು ನಿಂತದ್ದೇ ವರವೆಂಬಂತೆ ಬಯಲಿಗೆ ಹೋಗು ಆಡುತ್ತಾ ಕೂತಿದ್ದರು. ಅವರದೇ ಲೋಕ ಅದು ಎಂಬಂತೆ.
ಯಾರೋ ಸಿಗರೇಟು ಸೇದಿದರು. ಯಾರೋ ಕೆಮ್ಮಿದರು, ಮತ್ಯಾರೋ ಸರ್ಕಾರವನ್ನು ಬೈದರು. ಸಾರಿಗೆ ಸಚಿವರ ಹೆಸರು ಗೊತ್ತಿದ್ದವರು ಅವರ ಜನ್ಮ ಜಾಲಾಡಿದರು. ಮತ್ಯಾರೋ ಡ್ರೈವರ್ ಜೊತೆ ವಾದಕ್ಕಿಳಿದಿದ್ದರು. ಅವನು ಬೇಸತ್ತು ಅಲ್ಲಿಂದಿಲ್ಲಿಗೆ ಇಲ್ಲಿಂದಲ್ಲಿಗೆ ಓಡಾಡುತ್ತಿದ್ದ. ಅವನ ಕೈಲೂ ಮೊಬೈಲು. ಅವನಂತೆ ಹಲವರು ಸಿಗದ ನೆಟ್‌ವರ್ಕ್‌ನ ನಿರೀಕ್ಷೆಯಲ್ಲಿ ಅತ್ತಿತ್ತ ಅಲೆದಾಡುತ್ತಾ ಫೋನ್ ಆನ್ ಮಾಡುತ್ತಾ ಆಫ್ ಮಾಡುತ್ತಾ ಮತ್ತೊಬ್ಬರ ನೆಟ್‌ವರ್ಕ್ ಹೇಗಿದೆ ಎಂದು ಪರೀಕ್ಷಿಸುತ್ತಾ ಚಡಪಡಿಸುತ್ತಿದ್ದರು.
ಹುಡುಗನ ಕೈಗೆ ಚೆಂಡು ಬಂದಿತ್ತು. ಹಳದಿ ಚೆಂಡು ಹಸಿರು ಬಯಲಲ್ಲಿ ಓಡುತ್ತಾ ಓಡುತ್ತಾ ಹೋಯ್ತು. ಹುಡುಗ ಅದನ್ನು ಹಿಂಬಾಲಿಸಿದ. ಅಮ್ಮನ ಕಣ್ಣಲ್ಲಿ ಪುಟ್ಟ ಕಂದ ಓಡುತ್ತಿರುವ ಖುಷಿ ತುಳುಕುತ್ತಿತ್ತು. ಜೊತೆಗೊಂದು ಹನಿ ಆತಂಕ. ಹುಲ್ಲಿನ ಮೇಲೆ ಹುಡುಗ ತೊಪ್ಪನೆ ಬಿದ್ದ. ತಿರುಗಿ ನೋಡಿದರೆ ಅಮ್ಮನ ಮುಖದಲ್ಲಿ ನೋವು. ಹುಡುಗ ಕಿಲಕಿಲ ನಕ್ಕ. ಎದ್ದು ನಿಂತು ಮತ್ತೊಮ್ಮೆ ಬಿದ್ದ. ಏಳುವುದು ಬೀಳುವುದೇ ಆಟವಾಯಿತು. ಚೆಂಡು ಕಣ್ಮರೆಯಾಗಿತ್ತು.
ದೂರದಲ್ಲೆಲ್ಲೋ ನವಿಲು ಕೇಕೆ ಹಾಕಿತು. ಹುಡುಗ ಬೆಚ್ಚಿಬಿದ್ದು ನೋಡಿದ. ತಾಯಿಯೂ ಕಿವಿಯಾನಿಸಿ ಕೇಳಿದಳು. ಕೂಗಿದ್ದು ನವಿಲು ಹೌದೋ ಅಲ್ಲವೋ ಎಂಬ ಅನುಮಾನ. ಅದು ನವಿಲು ಮಗೂ ಅಂತ ತಾಯಿ ಹೇಳಿದ್ದು ಅಸ್ಪಷ್ಟವಾಗಿ ಗಾಳಿಯಲ್ಲಿ ಬಂದು ತೇಲಿತು. ಅವಳಿಗೆ ಯಾವುದೋ ಹಳೆಯ ನೆನಪು. ನವಿಲಿನ ಕೂಗಿಗೆ ಅವಳ ಕಂಗಳು ಹೊಳಪಾದವು. ಅದೇ ಮೊದಲ ಬಾರಿಗೆ ನವಿಲಿನ ಕೇಕೆ ಕೇಳಿದ ಮಗು ಬೆಚ್ಚಿ ಅಮ್ಮನನ್ನು ತಬ್ಬಿಕೊಂಡಿತು. ತಾಯಿ ಮಗುವನ್ನು ಅವಚಿಕೊಂಡಳು.
ನಾವು ಕೂಡ ಸುತ್ತ ಹಬ್ಬಿದ ಬೆಟ್ಟವನ್ನು ಅದು ಸಂಜೆ ಬಿಸಿಲಲ್ಲಿ ಮಿರುಗುವುದನ್ನು ನೋಡುತ್ತಾ ಕೂತೆವು. ಅಂಥ ಸಂಜೆಯನ್ನು ಕಣ್ತುಂಬಿಕೊಂಡು ಎಷ್ಟೋ ದಿನವಾಗಿತ್ತು. ಅದರ ಪರಿವೆಯೇ ಇಲ್ಲವೆಂಬಂತೆ ಯಾರೋ ಕಿರುಚಿಕೊಳ್ಳುತ್ತಿದ್ದರು. ಬಸ್ಸು ಕೆಟ್ಟು ನಿಂತದ್ದು ಕೂಡ ಒಂದು ಸೌಭಾಗ್ಯ ಎಂದು ಭಾವಿಸಬೇಕು ಎಂದು ನಾವು ಮಾತಾಡಿಕೊಂಡೆವು.
ಹಾಗೆ ಎಲ್ಲರೂ ಅಂದುಕೊಳ್ಳುವುದು ಅಷ್ಟು ಸುಲಭವಲ್ಲ ಎಂಬುದು ನಮಗೂ ಗೊತ್ತಾಗಿತ್ತು. ಯಾರೋ ನೀರು ಬೇಕು ಎಂದು ಕಿರುಚುತ್ತಿದ್ದರು. ಮತ್ಯಾರೋ ಒಂದು ಬಾಟಲಿ ನೀರು ತಂದುಕೊಟ್ಟರು. ಮತ್ಯಾರಿಗೋ ಮಾರನೇ ದಿನ ಯಾವುದೋ ಸಂದರ್ಶನಕ್ಕೆ ಹಾಜರಾಗಬೇಕಿತ್ತು. ಕೆಟ್ಟು ನಿಂತ ಬಸ್ಸು ಅವರ ಅದೃಷ್ಟವನ್ನೇ ಬದಲಾಯಿಸಬಹುದಿತ್ತು. ಸಿಗಬಹುದಾಗಿದ್ದ ಕೆಲಸ ಸಿಗದೇ ಹೋಗಿ ಮತ್ತೊಂದು ಬಾಗಿಲು ಮತ್ತೆಲ್ಲೋ ತೆರೆದುಕೊಳ್ಳಬಹುದೇನೋ ಎಂಬ ನಿರೀಕ್ಷೆ ಕೂಡ ಇಲ್ಲದವರಂತೆ ಅವರು ಚಡಪಡಿಸುತ್ತಿದ್ದರು. ಮತ್ತೊಂದು ಬಾಗಿಲಿನ ನಿರೀಕ್ಷೆಯೇ ಇಲ್ಲದೆ ಬದುಕುವುದು ಕಷ್ಟವೇ.
ದೂರದಲ್ಲೆಲ್ಲೋ ಬಸ್ಸು ಬಂದ ಸದ್ದು. ಎಲ್ಲರ ಕಿವಿಯೂ ಚುರುಕಾಯಿತು. ಆ ಬಸ್ಸಿನಲ್ಲಿ ಹತ್ತಿ ಹೋಗೋಣ ಎಂದುಕೊಂಡು ಅನೇಕರು ಲಗೇಜು ಕೆಳಗಿಳಿಸಿ ಕಾದರು. ಬಸ್ಸು ಕೆಟ್ಟು ನಿಲ್ಲುವುದು, ಜನ ಕಾಯುವುದು ಹೊಸತೇನಲ್ಲ ಎಂಬಂತೆ ಆ ಬಸ್ಸು ಯಾರ ಮೇಲೂ ಕರುಣೆ ತೋರದೇ ಹೊರಟು ಹೋಯಿತು. ಮುಂದಿನ ಊರಿಗೆ ಹೋಗಿ ಫೋನ್ ಮಾಡಿ ಬೇರೆ ಬಸ್ಸು ತರಿಸುತ್ತೇನೆ ಎಂದು ಡ್ರೈವರ್ ಕೂಡ ಆ ಬಸ್ಸು ಹತ್ತಿ ಹೊರಟೇ ಬಿಟ್ಟ.
ಒಂಟಿಯಾಗಿ ಉಳಿದ ಕಂಡಕ್ಚರಿಗೆ ಸಹಸ್ರನಾಮಾರ್ಚನೆಯಾಯಿತು. ಆ ಬಸ್ಸಿನಲ್ಲಿ ಬಂದದ್ದೇ ತಪ್ಪು ಎಂದು ಅನೇಕರು ಅವನ ಮೇಲೆ ಹರಿಹಾಯ್ದರು. ಮತ್ಯಾರೋ ಪ್ರಾಣ ಹೋಗುತ್ತೆ ಎಂದು ಹಸಿವಿನಿಂದ ಚಡಪಡಿಸುತ್ತಾ ತಿನ್ನುವುದಕ್ಕೆ ಏನಾದರೂ ಕೊಡಿ ಎಂದು ಸಿಕ್ಕಸಿಕ್ಕವರನ್ನು ಕೇಳತೊಡಗಿದರು. ಅವರಿಗೆ ಡಯಾಬಿಟೀಸು ಎಂದು ಯಾರೋ ಹೇಳಿ ಅವರ ಕರುಣಾಜನಕ ಸ್ಥಿತಿಯನ್ನು ಮತ್ತಷ್ಟು ಕರುಣಾಮಯಿಯಾಗಿಸಿದರು.
ಎಷ್ಟು ಹೊತ್ತಾದರೂ ಬಸ್ಸು ಬರಲಿಲ್ಲ. ಅದು ಬಂದರೆ ಬಂತು ಬರದಿದ್ದರೆ ಇಲ್ಲ ಎಂಬಂತೆ ಆ ತಾಯಿ ಮಗು ಆಟವಾಡುತ್ತಲೇ ಇದ್ದರು. ಅವರನ್ನು ಬೆಳಗುತ್ತಿದ್ದ ಸಂಜೆ ಬಿಸಿಲು ಕ್ರಮೇಣ ಹೊಳಪು ಕಳಕೊಳ್ಳುತ್ತಿತ್ತು. ತಣ್ಣನೆ ಗಾಳಿ ಬೀಸತೊಡಗಿ ಎಲ್ಲರಿಗೂ ಹಿತವೆನ್ನಿಸಿತು. ಮೈಮನಗಳು ತಣ್ಣಗಾಗುತ್ತಿದ್ದಂತೆ ಹಲವರು ನಿಂತಲ್ಲೇ ಅಡ್ಡಾದರು. ಕೆಲವರು ರಸ್ತೆ ಬದಿಯಲ್ಲೇ ನಿದ್ದೆ ಹೋದರು.
ನಾವು ನೋಡುತ್ತಿದ್ದ ಹಾಗೆ ತಾಯಿ ಮಗು ಕತ್ತಲಲ್ಲಿ ಕರಗಿಹೋಗಿ ಅವರ ಮಾತಷ್ಟೇ ಕೇಳಿಸುತ್ತಿತ್ತು. ತಾಯಿ ಮಗನಿಗೇನೋ ಗುಟ್ಟುಹೇಳುವಂತೆ ಮಾತಾಡುತ್ತಿದ್ದಳು. ಮಗ ಇಡೀ ಜಗತ್ತಿಗೇ ಕೇಳುವಂತೆ ಕಿರುಚಿಕೊಳ್ಳುತ್ತಿದ್ದ. ಸ್ವಲ್ಪ ಹೊತ್ತಿಗೆಲ್ಲ ಮತ್ತಷ್ಟು ಕತ್ತಲು ಹಬ್ಬಿ ನಾವು ಕೂತ ಜಾಗದಿಂದ ಏನೇನೂ ಕಾಣಿಸುತ್ತಿರಲಿಲ್ಲ. ಬರೀ ತಾಯಿ ಮಗುವಿ.ನ ಮಾತುಗಳು ಬೀಸುತ್ತಿದ್ದ ತಂಗಾಳಿಯಲ್ಲಿ ಆಗಾಗ ಬಂದು ಕಿವಿಗೆ ತಾಕುತ್ತಿದ್ದವು.
ಅದು ಮುಗಿಯದ ರಾತ್ರಿಯಂತೆ ಭಾಸವಾಗುತ್ತಿತ್ತೇನೋ. ಅಷ್ಟರಲ್ಲಿ ಚಂದ್ರ ಮೂಡಿದ. ಚಂದಿರನ ತಂಬೆಳಕಲ್ಲಿ ಇಡೀ ಜಗತ್ತು ವಿಚಿತ್ರ ಹೊಳಪಿನಿಂದ ಕಂಗೊಳಿಸುತ್ತಿತ್ತು. ತಾಯಿ ಈಗ ಮಗುವಿಗೆ ಮೂಡುತ್ತಿದ್ದ ಚಂದ್ರನನ್ನು ತೋರಿಸುತ್ತಿದ್ದಳು. ಚಂದಿರನನ್ನು ನೋಡಿದ ಮಗು ನಗುತ್ತಿತ್ತು. ಅಮ್ಮನಿಲ್ಲದ ತಬ್ಬಲಿ ಚಂದಿರನೂ ನಗುತ್ತಿದ್ದ.
ನಾವು ಎಲ್ಲವನ್ನೂ ನೋಡುತ್ತಾ ಕೂತು ಬಿಟ್ಟೆವು. ಅಲ್ಲೆಲ್ಲೋ ಮತ್ತೆ ನವಿಲು ಕೂಗಿತು. ರಸ್ತೆಯ ಒಂದು ಬದಿಯಲ್ಲಿ ಆಳದ ಕಣಿವೆ. ದೂರದಲ್ಲಿ ಎಲ್ಲೋ ಮಳೆಯಾಗಿರಬೇಕು ಎಂದು ನಾವು ಊಹಿಸುತ್ತಿದ್ದಂತೆ ದೂರದಲ್ಲೆಲ್ಲೋ ಜಲಪಾತದ ಸದ್ದು ಕೇಳಿಸಿತು. ಇಷ್ಟು ಹೊತ್ತೂ ಆ ಸದ್ದು ನಮ್ಮ ಕಿವಿಗೆ ಬಿದ್ದಿರಲೇ ಇಲ್ಲವಲ್ಲ ಎಂದು ನಾವು ಅಚ್ಚರಿಪಟ್ಟೆವು.
ತಾಯಿ ಆ ಕತ್ತಲಲ್ಲೇ ರಸ್ತೆ ಪಕ್ಕದ ಗಿಡದಲ್ಲಿ ಅರಳಿದ ಹೂವು ಕೀಳುತ್ತಿದ್ದಳು. ಮಗು ಅಂಥ ಒಂದಷ್ಟು ಹೂವನ್ನು ಕೈಯಲ್ಲಿಟ್ಟುಕೊಂಡು ದೇವಲೋಕದಿಂದ ಇಳಿದ ಕಂದನಂತೆ ಕಾಣಿಸುತ್ತಿತ್ತು. ಅದೇ ಕತ್ತಲೆಯಲ್ಲಿ ತಾಯಿ ಬಸ್ಸಿಗೆ ಹತ್ತಿ ಪುಟ್ಟದೊಂದು ಬ್ಯಾಗು ತಂದು ಮಗುವಿಗೆ ಹಾಲು ಕುಡಿಸಿದಳು. ಮಗುವಿನ ತುಟಿಯ ಇಕ್ಕೆಲದಲ್ಲಿ ಇಳಿದ ಹಾಲನ್ನು ಸೆರಗಿನಿಂದ ಒರೆಸಿದಳು.
ಇನ್ನೇನು ಅವಳ ಸಹನೆ ಕೆಡುತ್ತದೆ. ಅವಳು ಕಿರುಚುತ್ತಾಳೆ. ಕನಿಷ್ಟ ಮುಖ ಕಿವಿಚುತ್ತಾಳೆ. ಮಗುವಿನ ಮೇಲೆ
ರೇಗುತ್ತಾಳೆ ಎಂದು ನಾವು ಕಾದೆವು. ಅವಳ ಮುಖದಲ್ಲಿ ಹಾಗಿದ್ದರೂ ಮಂದಹಾಸವೇ ಇತ್ತು. ಆ ಬೆಳಕಿನಲ್ಲಿ ಅದು ತನ್ನ ಪ್ರಭೆಯನ್ನು ಹೆಚ್ಚಿಸಿಕೊಂಡು ಚಂದಿರನ ಜೊತೆ ಸ್ಪರ್ಧೆಗಿಳಿದಂತೆ ಕಾಣಿಸುತ್ತಿತ್ತು.
ಇದ್ದಕ್ಕಿದ್ದಂತೆ ತಣ್ಣನೆ ಗಾಳಿ ಬೀಸಿತು. ಆ ಗಾಳಿ ಮಗುವಿನ ಕಿವಿ ಹೊಕ್ಕಿರಬೇಕು. ಮಗು ಕೇಕೆ ಹಾಕಿತು. ನವಿಲಿನ ಕೇಕೆಗಿಂತ ಇದೇ ಚೆಂದ ಅನ್ನಿಸಿತು. ಆ ಕ್ಷಣ ಮಗು ಕೂಡ ನಮಗೆ ನವಿಲಿನ ಹಾಗೆ ಕಾಣಿಸಿತು. ಅದನ್ನು ನೋಡುತ್ತಾ ನಾವು ನಮ್ಮೊಳಗೇ ನಕ್ಕೆವು.
ಬಸ್ಸುಗಳ ಓಡಾಟ ಶುರುವಾಗಿತ್ತು. ಒಂದೆರಡು ಬಸ್ಸುಗಳು ಪ್ರಖರ ಬೆಳಕು ಚೆಲ್ಲುತ್ತಾ ನಮ್ಮನ್ನು ಹಾದು ಹೋದವು. ಅವಕ್ಕೆ ಕೈ ಅಡ್ಡ ಹಿಡಿದು ಕಾಡಿ ಬೇಡಿ ಕೆಲವರು ಬಸ್ಸು ಹತ್ತಿಕೊಂಡು ಹೊರಟು ಹೋದರು. ಹೋದವರನ್ನು ನೋಡುತ್ತಾ ಅನೇಕರು ಅವರ ಅದೃಷ್ಟ ತಮಗಿಲ್ಲವಲ್ಲ ಎಂದು ನಿಟ್ಟುಸಿರು ಬಿಡುತ್ತಿದ್ದರು.
ಹೀಗೆ ಕಾಯುತ್ತಾ ಎಷ್ಟೊ ಹೊತ್ತು ಕಳೆದಿರಬೇಕು. ಮಗು ತಾಯಿಯ ಮಡಿಲಲ್ಲಿ ನಿದ್ದೆ ಮಾಡುತ್ತಿತ್ತು. ಆ ಮಗುವಿನ ಸಿಹಿನಿದ್ದೆಯೇ ತನ್ನ ಏಕೈಕ ಕಾಯಕ ಎಂಬಂತೆ ತಾಯಿ ಅದನ್ನು ಅವಚಿಕೊಂಡಿದ್ದಳು. ಎಲ್ಲರ ತಾಳ್ಮೆಯೂ ಕೆಟ್ಟು ನಾವೂ ಕೂಡ ಸಿಟ್ಟನ್ನು ಹೊರಹಾಕುವ ಸ್ಥಿತಿಗೆ ಬಂದು ತಲುಪಿದ್ದೆವು. ಇನ್ನೇನು ಕಂಡಕ್ಟರ್ ಮೇಲೆ ನಮ್ಮ ಸಿಟ್ಟು ವ್ಯಕ್ತವಾಗಬೇಕು ಅನ್ನುವಷ್ಟರಲ್ಲಿ ಡ್ರೈವರ್ ಮತ್ತೊಂದು ಬಸ್ಸಿನೊಂದಿಗೆ ಹಾಜರಾದ.
ಎಲ್ಲರೂ ಹೊಸ ಜೀವ ಬಂದಂತೆ ಎದ್ದು ಆ ಬಸ್ಸು ಹತ್ತಿದರು. ನಾವೂ ಬಸ್ಸು ಹತ್ತಿ ಕೂತೆವು. ಎಲ್ಲರ ಅವಸರ ಮುಗಿದ ನಂತರ ಆ ತಾಯಿ ಮಗುವನ್ನು ಅವಚಿಕೊಂಡು ಬಸ್ಸು ಹತ್ತಿ ಕೂತಳು. ಅವಳ ತುಟಿಯ ಮಂದಹಾಸ ಕಿಂಚಿತ್ತೂ ಮಾಸಿರಲಿಲ್ಲ.
ಬಸ್ಸು ಹೊರಡುತ್ತಿದ್ದಂತೆ ನಾವು ನಿದ್ದೆ ಹೋದೆವು. ಕಣ್ಣು ಬಿಡುವ ಹೊತ್ತಿಗೆ ಬೆಳಕಾಗಿತ್ತು. ಹಿಂತಿರುಗಿ ನೋಡಿದರೆ ಅಲ್ಲಿ ಆ ತಾಯಿ ಮತ್ತು ಮಗು ಮತ್ತೆ ಆಟವಾಡುತ್ತಾ ಕೂತಿದ್ದರು. ಮಗು ತಾಯಿಯ ಮುಂಗುರಳನ್ನು ತೀಡುತ್ತಿತ್ತು. ತಾಯಿ ಕಿಲಕಿಲ ನಗುತ್ತಿದ್ದಳು.
ಬೆಳಗಾಯಿತು.

Monday, September 20, 2010

ಬಂಡಾಯ; ಮಳೆ ನಿಂತರು ಮರದ ಹನಿಬಿಡದು ಎಂಬಂತೆ

ಬಂಡಾಯ ಸಾಹಿತ್ಯಕ್ಕೆ ಮೂವತ್ತು ವರ್ಷ. ಮೂವತ್ತೆಂದರೆ ದಂಗೆಯೇಳುವ ವಯೋಮಾನ ದಾಟಿ, ಮನಸ್ಸು ಹದಗೊಳ್ಳುವ ಕಾಲಾವಧಿ. ಬಂಡಾಯ ಚಳವಳಿ ಕೂಡ ಹೆಚ್ಚೂಕಮ್ಮಿ ಅದೇ ಸ್ಥಿತಿಯಲ್ಲಿದೆ. ಕೆಲವೊಮ್ಮೆ ಎಲ್ಲವನ್ನೂ ಒಪ್ಪಿಕೊಳ್ಳುವಂತೆ, ಮತ್ತೆ ಕೆಲವೊಮ್ಮೆ ಸಕಲವನ್ನು ಧಿಕ್ಕರಿಸುವಂತೆ ನಟಿಸುತ್ತಿದ್ದ ಬಂಡಾಯ ಮನೋಧರ್ಮವನ್ನು ಒಂದು ಅವಧಿಯಲ್ಲಿ ನಮ್ಮ ರಾಜಕಾರಣ ಕೈ ಹಿಡಿದು ನಡೆಸಿತ್ತು. ಬಂಡಾಯ ಚಳವಳಿಯ ಮುಂಚೂಣಿಯಲ್ಲಿದ್ದ ಅನೇಕರು ಸರ್ಕಾರದ ಆಪ್ತವಲಯದಲ್ಲಿ ಕಾಣಿಸಿಕೊಂಡಿದ್ದರು. ಅನೇಕರು ಈಗಲೂ ಅದೇ ಮೊಗಸಾಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ರಾಜಕೀಯ ಅವರ ಕೈ ಹಿಡಿದು ನಡೆಸಿತೋ, ಅವರು ರಾಜಕಾರಣದ ಕೈ ಹಿಡಿದು ನಡೆಸಿದರೋ ಎಂಬುದು ಸ್ಪಷ್ಟವಿಲ್ಲ. ಇಬ್ಬರು ಪರಸ್ಪರ ಕೈ ಕೈ ಹಿಡಿದುಕೊಂಡು ನಡೆಯುವುದನ್ನು ದೂರದಿಂದ ನೋಡಿದವರಿಗೆ, ನಡೆಯುವವರು ಯಾರು, ನಡೆಸುತ್ತಿರುವವರು ಯಾರು ಎಂಬುದು ಸ್ಪಷ್ಟವಾಗುವುದಿಲ್ಲ.
ನವ್ಯಕ್ಕೂ ಬಂಡಾಯಕ್ಕೂ ಅಂಥ ವ್ಯತ್ಯಾಸವೇನೂ ಇದ್ದಂತಿರಲಿಲ್ಲ. ನವ್ಯ ಚಳವಳಿಯಲ್ಲಿ ಎಲ್ಲರೂ’ ಇದ್ದರು. ಬಂಡಾಯ ಚಳವಳಿ ಆರಂಭಿಸಿದಾಗ ಅಲ್ಲಿದ್ದವರು ಕೆಲವರು’ ಮಾತ್ರ. ಆ ಕೆಲವರಿಗೂ ನವ್ಯದ ಜೊತೆ ಅಂಥ ಜಗಳವೇನೂ ಇರಲಿಲ್ಲ. ಬಂಡಾಯದ ಧಾಟಿಗೂ ನವ್ಯ ಶೈಲಿಗೂ ಅಂಥ ಎದ್ದು ಕಾಣುವ ವ್ಯತ್ಯಾಸವೂ ಇರಲಿಲ್ಲ. ಕ್ರಮೇಣ ಬಂಡಾಯ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ದಲಿತ ಸಾಹಿತ್ಯವನ್ನೂ ತನ್ನ ಒಂದು ಕವಲು ಎಂಬಂತೆ ಭಾವಿಸಿದ್ದೂ ಇದೆ.
ನವ್ಯಚಳವಳಿಯನ್ನು ಪತ್ರಿಕೆಗಳೂ ಲೇಖಕರೂ ಪೋಷಿಸಿದಷ್ಟು ಬಂಡಾಯ ಚಳವಳಿಯನ್ನು ಪೋಷಿಸಲಿಲ್ಲ ಅನ್ನುವುದೂ ಸತ್ಯ. ಹೀಗಾಗಿ ಅದು ಕೇವಲ ತನ್ನ ಸತ್ವದಿಂದಾಗಿಯೇ ಉಳಿಯಬೇಕಾಗಿತ್ತು. ನವ್ಯಕ್ಕೆ ತನ್ನ ರೂಪರೇಷೆಗಳನ್ನು ಅಭಿವ್ಯಕ್ತಿ ವಿಧಾನಗಳನ್ನು ವಿಮರ್ಶೆಯ ಪರಿಭಾಷೆಗಳನ್ನು ಯುರೋಪ್ ಮತ್ತು ಇಂಗ್ಲಿಷ್ ಸಾಹಿತ್ಯದಿಂದ ಪಡೆದುಕೊಂಡು ತನ್ನ ಮೂಸೆಯಲ್ಲಿ ಅದನ್ನು ಬಡಿದು ಕಾಯಿಸಿ ಹೊಸ ಆಭರಣವೆಂಬಂತೆ ಧರಿಸಿಕೊಂಡಿತು. ನವ್ಯ ಕಾವ್ಯದ ಲಯಬದ್ಧತೆ, ರೂಪಕ, ಅಭಿವ್ಯಕ್ತಿಗಳಲ್ಲಿ ಇಂಗ್ಲಿಷ್ ಕವಿಗಳ, ಕಾದಂಬರಿಕಾರರ, ವಿಮರ್ಶಕರ ನೆರಳಿತ್ತು. ಬಂಡಾಯ ಆ ಹೊತ್ತಿಗೆ, ದೇಸಿ ಅಭಿವ್ಯಕ್ತಿಯಂತೆ ಕಾಣಿಸಿದ್ದಂತೂ ನಿಜ. ನಮ್ಮ ಜನಪದ, ನಮ್ಮ ನೋವು, ನಮ್ಮವರ ಶೋಷಣೆಗಳನ್ನು ಹೊತ್ತ ಕತೆ, ಕವಿತೆಗಳು ಆರಂಭದಲ್ಲಿ ಬಂಡಾಯ ಚಳವಳಿಯನ್ನು ಮುನ್ನಡೆಸಿದವು.
ಒಂದು ವಿಚಿತ್ರ ತಲ್ಲಣದೊಂದಿಗೇ ಬಂಡಾಯ ಚಳವಳಿ ಆರಂಭವಾಯಿತು ಎನ್ನಬೇಕು. ಅದಕ್ಕೆ ನವ್ಯದ ತೆಕ್ಕೆಯಿಂದ ಬಿಡಿಸಿಕೊಳ್ಳುವ ಅನಿವಾರ್ಯತೆಯಿತ್ತು. ನವ್ಯ ಸಾಹಿತ್ಯ ಅರ್ಥಪೂರ್ಣತೆಯತ್ತ ತುಡಿಯುತ್ತ, ಶ್ರೇಷ್ಠತೆಯ ವ್ಯಾಮೋಹಕ್ಕೆ ಒಳಗಾಗುತ್ತಾ ಓದುಗರಿಂದ ದೂರವಾಗುವ ಹಂತ ತಲುಪಿತ್ತು. ಕನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಓದುಗರನ್ನು ಕಳಕೊಂಡದ್ದು ನವ್ಯದ ಅವಧಿಯಲ್ಲೇ. ಬಂಡಾಯ ಚಳವಳಿ ಆ ಓದುಗರನ್ನು ಮರಳಿಸಲಿಲ್ಲ. ಬದಲಾಗಿ, ಹೊಸ ಓದುಗರನ್ನು ದೊರಕಿಸಿಕೊಟ್ಟಿತು.
ಆ ಹುಮ್ಮಸ್ಸಿನಲ್ಲೇ ಬಂಡಾಯ ಚಳವಳಿ, ನವ್ಯಕ್ಕಿಂತ ವಿಸ್ತಾರವೂ ವ್ಯಾಪಕವೂ ಆಗುತ್ತದೆ ಎಂದು ಆರಂಭದ ದಿನಗಳಲ್ಲಿ ನಂಬಿದವರಿದ್ದರು. ಹಾಗೆ ನೋಡಿದರೆ ಬಂಡಾಯ ಮತ್ತು ನವ್ಯ ಚಳವಳಿಗಳು ಜೊತೆಜೊತೆಯಾಗಿಯೇ ಸಾಗಬಹುದಾಗಿತ್ತೋ ಏನೋ? ಯಾಕೆಂದರೆ ನವ್ಯ ಕೂಡ ಒಂದು ಅರ್ಥದಲ್ಲಿ ಬಂಡಾಯವೇ ಆಗಿತ್ತು. ಅಲ್ಲಿ ನವೋದಯದ ವಿರುದ್ಧ ಬಂಡಾಯ ಎದ್ದ ಸೂಚನೆಯಿತ್ತು. ನವೋದಯ ಮತ್ತು ನವ್ಯದ ನಡುವಣ ಅವಧಿಯಲ್ಲಿ ಬರೆದ ಪ್ರಗತಿಶೀಲರು, ನವ್ಯ ಮತ್ತು ಬಂಡಾಯ ಎರಡರ ಸತ್ವವನ್ನೂ ತಮ್ಮೊಳಗೆ ಅವಿತಿಟ್ಟುಕೊಂಡಂತಿದ್ದರು.
ನಾಯಕರಿಲ್ಲದೇ ಹೋದರೆ ಒಂದು ಚಳವಳಿ ಹೇಗೆ ಮಾಸುತ್ತಾ ಹೋಗುತ್ತದೆ ಎನ್ನುವುದಕ್ಕಿಂತ, ಕಾಲಕ್ರಮೇಣ ಹೇಗೆ ಸಾಹಿತ್ಯದ ಆದ್ಯತೆ ಬೇರೆಯಾಗುತ್ತಾ ಹೋಗುತ್ತವೆ ಎನ್ನುವುದನ್ನು ನೋಡಬೇಕು. ಪ್ರಗತಿಶೀಲ ಲೇಖಕರು ಕೂಡ ಅಭಿವೃದ್ಧಿಯನ್ನು ಪೋಷಿಸುತ್ತಾ, ಮೂಢನಂಬಿಕೆ, ಕಂದಾಚಾರ, ಜಾತೀಯತೆಯ ವಿರುದ್ಧ ಸಿಡಿದೆದ್ದವರೇ ಆಗಿದ್ದರು. ನವ್ಯ ಅವೆಲ್ಲವನ್ನೂ ಮೀರಿದ್ದು ವ್ಯಕ್ತಿಯ ಅಂತರಂಗದ ತುಮುಲ, ತೊಳಲಾಟ. ಆ ತೊಳಲಾಟಕ್ಕೆ ಸಾಮಾಜಿಕ ಸ್ಥಿತಿಗತಿಯಷ್ಟೇ ಕಾರಣವಲ್ಲ. ವ್ಯಕ್ತಿಯ ಒಳಗಣ ತಲ್ಲಣ ಎನ್ನುವುದನ್ನು ಪ್ರತಿಪಾದಿಸುತ್ತಿರುವಂತೆ ಕಾಣಿಸಿತು. ಬಂಡಾಯ ಸಾಹಿತ್ಯಕ್ಕೆ ನೆರವಾದದ್ದು ಇದೇ.
ಬಹುಶಃ ೧೯೭೯ರಲ್ಲಿರಬೇಕು. ಧರ್ಮಸ್ಥಳದಲ್ಲಿ ಗೋಪಾಲಕೃಷ್ಣ ಅಡಿಗರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಿತು. ಅದೇ ದಿನ ಬೆಂಗಳೂರಿನಲ್ಲಿ ಬಂಡಾಯ ಸಾಹಿತ್ಯ ಸಮ್ಮೇಳನ ನಡೆಯಿತು. ಬಂಡಾಯ ಮತ್ತು ನವ್ಯ ಎರಡು ವಿಭಿನ್ನ ದಿಕ್ಕುಗಳನ್ನು ಪ್ರತಿನಿಧಿಸುತ್ತಿದೆ ಎಂಬುದಕ್ಕೆ ಕಾರಣವಾದದ್ದು ಇದೇ ಅಂಶ. ಹಾಗೆ ನೋಡಿದರೆ, ದಂಗೆಯೇಳುತ್ತಲೇ ಇರಬೇಕಾಗುತ್ತದೆ ಪ್ರತಿಯೊಬ್ಬನೂ.. ಎಂದು ಮೊಟ್ಟಮೊದಲು ಬರೆದವರು ಅಡಿಗರೇ. ಅವರು ಅಂತರಂಗದ ದಂಗೆಗೆ ಒತ್ತು ಕೊಟ್ಟಿದ್ದರು. ಬಂಡಾಯ ಸಾಮಾಜಿಕ ನೆಲೆಗಟ್ಟಿನಲ್ಲಿ ಹೆಚ್ಚು ಮೂರ್ತರೂಪದಲ್ಲಿ ಪ್ರಕಟಗೊಂಡಿತು.
ಹಾಗೆ ನೋಡಿದರೆ ಬಂಡಾಯ ಒಂದು ಸಾಹಿತ್ಯ ಸಂಘಟನೆಯಾಗಿ ಆರಂಭವಾಗಲಿಲ್ಲ. ಅದು ಒಂದು ಸಾಮಾಜಿಕ ಚಳವಳಿಯೆಂಬಂತೆ ಶುರುವಾಯಿತು. ಮಾರ್ಕ್ಸ್, ಲೋಹಿಯಾ, ಅಂಬೇಡ್ಕರ್ ವಿಚಾರಧಾರೆಗಳನ್ನು ಅಂಗೀಕರಿಸಿಕೊಂಡು ಅಳವಡಿಸಿಕೊಂಡು ಬಲವಾದ ತಾತ್ವಿಕ ನೆಲೆಗಟ್ಟಿನೊಂದಿಗೆ ಬೆಳೆಯತೊಡಗಿತು. ಇದೇ ಸಂದರ್ಭದಲ್ಲಿ ನಡೆದ ಮತ್ತೊಂದು ಘಟನೆ, ಬಂಡಾಯದ ದಿಕ್ಕನ್ನು ಕೊಂಚ ಬದಲಾಯಿಸಿತು ಎನ್ನಬೇಕು.
೧೯೯೦ರಲ್ಲಿ ಆರ್ ಸಿ ಹಿರೇಮಠ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಾಗ ಅದನ್ನು ವಿರೋಧಿಸಿ ಬೆಂಗಳೂರಲ್ಲಿ ಜಾಗೃತ ಸಾಹಿತ್ಯ ಸಮ್ಮೇಳನದಲ್ಲಿ ಬಂಡಾಯ ಮತ್ತು ನವ್ಯ ಲೇಖಕರು ಒಟ್ಟಾದರು. ಇದ್ದಕ್ಕಿದ್ದ ಹಾಗೆ ಸಾಹಿತ್ಯದಲ್ಲಿ ಬೇರೆಲ್ಲದಕ್ಕಿಂತ ಶ್ರೇಷ್ಠತೆಯೇ ಮುಖ್ಯ ಎಂದು ಅನೇಕರು ವಾದಿಸಿದರು. ಆಗ ಶ್ರೇಷ್ಠತೆಯನ್ನು ಒಂದು ವ್ಯಸನ ಎಂದು ಕರೆದವರು ಕೆ ವಿ ಸುಬ್ಬಣ್ಣ ಒಬ್ಬರೇ. ಆ ಅವಧಿಯಲ್ಲಿ ಶ್ರೇಷ್ಠತೆಯ ವಾದ ಎಷ್ಟೊಂದು ಚರ್ಚೆಗಳಿಗೆ ಕಾರಣವಾಯಿತು ಎಂದರೆ ಸಾಹಿತ್ಯದ ಬೇರೆಲ್ಲ ಚಳವಳಿಗಳೂ ಶ್ರೇಷ್ಠತೆಯ ಚಳವಳಿಯೊಳಗೆ ಕರಗಿಹೋಗುತ್ತವೆ ಎಂಬ ಭಾವನೆ ಹುಟ್ಟುವಂತಿತ್ತು.
**********
ಮೂವತ್ತು ವರ್ಷಗಳ ನಂತರ ತಿರುಗಿ ನೋಡಿದರೆ ಬಂಡಾಯದ ಹುರುಪು, ಹುಮ್ಮಸ್ಸು, ಆರಂಭದ ದಿನಗಳಲ್ಲಿ ಬಂದ ಮೈ ನವಿರೇಳಿಸುವ ಕತೆ, ಕವಿತೆಗಳೆಲ್ಲ ಕಣ್ಮುಂದೆ ಸುಳಿಯುತ್ತವೆ. ಬರಗೂರು, ಚನ್ನಣ್ಣ ವಾಲೀಕಾರ, ಕಾಳೇಗೌಡ ನಾಗವಾರ, ಕುಂವೀ, ಚಂದ್ರಶೇಖರ ಪಾಟೀಲ, ಬೆಸಗರಹಳ್ಳಿ ರಾಮಣ್ಣ, ಬೊಳುವಾರು, ಗೀತಾ ನಾಗಭೂಷಣ, ಬಿಟಿ ಲಲಿತಾ ನಾಯಕ, ಸುಧಾಕರ- ಥಟ್ಟನೆ ನೆನಪಾಗುವ ಈ ಹೆಸರುಗಳ ಜೊತೆ ಇನ್ನಷ್ಟು ಮಂದಿ ಬಂಡಾಯ ಸಾಹಿತ್ಯ ಎಂಬ ಹಣೆಪಟ್ಟಿ ಇಲ್ಲದೆಯೂ ಮತ್ತೆ ಮತ್ತೆ ಓದಬಹುದಾದಂಥ ಕತೆ, ಕವಿತೆ, ಕಾದಂಬರಿಗಳನ್ನು ಕೊಟ್ಟರು. ಸಾಮಾಜಿಕ ಕಾಳಜಿಯ ಜೊತೆಗೆ ವೈಯಕ್ತಿಕ ಹಸಿವೂ ಇವರಲ್ಲಿದ್ದುದರಿಂದ ಅದು ಸಾಧ್ಯವಾಯಿತೆನ್ನಬೇಕು. ಅಲ್ಲದೇ, ಒಂದು ಚಳವಳಿಯನ್ನು ಕಟ್ಟಿ ಬೆಳೆಸುವ ಕಾಳಜಿ ಮತ್ತು ಬದ್ಧತೆಯೂ ಅವರಲ್ಲಿತ್ತು. ಆರಂಭದ ದಿನಗಳ ಕಸುವು, ಫಲವತ್ತತೆ ಮತ್ತು ಜೀವಂತಿಕೆಯನ್ನು ಅದು ನಂತರದ ದಿನಗಳಲ್ಲೂ ಉಳಿಸಿಕೊಂಡಿದ್ದರೆ ಬಂಡಾಯ ಚಳವಳಿ ತನ್ನ ಬಿಸುಪನ್ನು ಇವತ್ತೂ ಉಳಿಸಿಕೊಂಡಿರುತ್ತಿತ್ತೋ ಏನೋ?
ಮೂವತ್ತು ವರ್ಷದ ನಂತರವೂ ಬಂಡಾಯ ಸಾಹಿತ್ಯ ಎಂದರೆ ಬರಗೂರು, ವಾಲೀಕಾರ, ನೀರಮಾನ್ವಿ, ವೀರಭದ್ರ, ಕಾಳೇಗೌಡ, ಬೆಸಗರಹಳ್ಳಿ, ಪಾಟೀಲ ಮುಂತಾದವರೇ. ಆರಂಭದ ದಿನಗಳಲ್ಲಿ ಅವರು ಕೊಟ್ಟ ಸತ್ವಯುತ ಸಾಹಿತ್ಯ ಮತ್ತು ಚಳವಳಿಯನ್ನು ಪ್ರಭಾವಿಸಿದ ರೀತಿ ಅನನ್ಯ. ನಂತರದ ದಿನಗಳಲ್ಲಿ ಬಂಡಾಯ ಸಾಹಿತ್ಯಕ್ಕೆ ಅಷ್ಟೇ ತೀವ್ರತೆಯಿಂದ ಫಲವತ್ತು ಕೊಡುಗೆಯನ್ನು ನೀಡುವವರು ಬರಲಿಲ್ಲ. ಆನಂತರ ಬಂದ ಬಹುತೇಕ ಲೇಖಕರು ಈ ತಮ್ಮ ತಮ್ಮ ಸ್ವಂತ ನೆಲೆಯನ್ನು ಕಂಡುಕೊಳ್ಳುವಲ್ಲಿ ಉತ್ಸಾಹ ತೋರಿದರೇ ಹೊರತು, ಒಂದು ಚಳವಳಿಗೆ ನಿಷ್ಠರಾಗುವ ಆಸಕ್ತಿಯನ್ನೂ ಹೊಂದಿರಲಿಲ್ಲ. ಹೀಗಾಗಿ ಬಂಡಾಯ ಎನ್ನುವುದು ನವ್ಯ ಮತ್ತು ಪ್ರಗತಿಶೀಲದ ಹಾಗೆ ಒಂದು ಕಾಲದ ಪ್ರಖರ ಪ್ರತಿಭೆಯಂತೆ ಕಾಣಿಸುತ್ತಿದೆಯೇ ಹೊರತು, ಇವತ್ತು ಚಲಾವಣೆಯಲ್ಲಿರುವ ನಾಣ್ಯದಂತೆ ಕಾಣಿಸುತ್ತಿಲ್ಲ. ನೆನಪುಗಳ ಜೋಕಾಲಿಯಲ್ಲಿ ಅದು ಹಿಂದಕ್ಕೂ ಮುಂದಕ್ಕೂ ತನ್ನನ್ನು ಜೀಕಿಕೊಳ್ಳುತ್ತಾ, ಆ ಓಡಾಟದಲ್ಲೇ ಎರಡೂ ಕಾಲಗಳನ್ನೂ ಸ್ಪರ್ಶಿಸುವುದಕ್ಕೆ ಹಂಬಲಿಸುತ್ತಿರುವಂತೆ ತೋರುತ್ತದೆ.
**********
ಹಾಗಿದ್ದರೆ ಇವತ್ತಿನ ಸಾಹಿತ್ಯದ ನಿಲುವುಗಳೇನು? ರಹಮತ್ ತರೀಕೆರೆಯಂಥ ವಿಮರ್ಶಕರು ತಾತ್ವಿಕತೆ, ಸಾಮಾಜಿಕ ಬದ್ಧತೆಯನ್ನು ಮುಂದಿಟ್ಟುಕೊಂಡು ಸಾಹಿತ್ಯಕೃತಿಯನ್ನೂ ಲೇಖಕರನ್ನೂ ಪರಿಭಾವಿಸುವ ಉತ್ಸಾಹ ತೋರುತ್ತಿದ್ದಾರೆ. ಮತ್ತೊಂದು ಕಡೆ ವಿಚಾರವಾದ, ಬೌದ್ಧಿಕತೆ ಎರಡನ್ನೂ ಒಳಗೊಂಡ ಬರಹಗಳನ್ನು ಮೆಚ್ಚುವ ವಿಮರ್ಶಕರು ಕಾಣಿಸಿಕೊಳ್ಳುತ್ತಿದ್ದಾರೆ. ಸಂಸ್ಕೃತಿ ವಿಮರ್ಶೆಯ ಹೆಸರಲ್ಲಿ ಹೊರಗಿನಿಂದ ಮತ್ತೊಂದಷ್ಟು ವಿಚಾರಗಳು ಹರಿದು ಬರುತ್ತಿವೆ. ನೋಮ್ ಚಾಮ್‌ಸ್ಕಿಯಂಥವರನ್ನು ಹಿಡಿದು ತಂದು, ನಮ್ಮ ಪರಿಸರಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುವ ಯತ್ನಗಳು ಸೋಲು ಕಂಡಿವೆ. ಇದ್ದಕ್ಕಿದ್ದ ಹಾಗೆ ಮೌಖಿಕ ಪರಂಪರೆಯೂ ಆ ಪರಂಪರೆಗೆ ನಿಷ್ಠರಾದವರೂ ಹಲವರಿಗೆ ಶ್ರೇಷ್ಠರಾಗಿ ಕಾಣಿಸುತ್ತಿದ್ದಾರೆ. ಈ ಮಧ್ಯೆ ಅಭಿಜಾತ ಸಾಹಿತ್ಯಕ್ಕಷ್ಟೇ ತನ್ನ ಮಾನ್ಯತೆ ಎನ್ನುವ ವಿಮರ್ಶಕರೂ ಇದ್ದಾರೆ. ಹಿರಿಯ ವಿಮರ್ಶಕರ ಗಡಿಯಾರ ನಿಂತು ಹೋಗಿ ದಶಕಗಳೇ ಕಳೆದಿವೆ. ಸಾಮಾಜಿಕ ಬದ್ಧತೆಗೆ ತನ್ನನ್ನು ತೆತ್ತುಕೊಂಡಂತೆ ಬರೆಯಬೇಕು ಎನ್ನುವ ಹುಸಿ ಅಪೇಕ್ಷೆಗಳನ್ನು ಹೊಂದಿದ ವಿಮರ್ಶಕರೂ ಆಗೀಗ ಎದುರಾಗುತ್ತಾರೆ.
ಇವೆಲ್ಲದರ ಮಧ್ಯೆ ಓದುಗರು ನಿಜಕ್ಕೂ ಯಾವುದರ ಪರವಾಗಿದ್ದಾರೆ? ಓದುಗರ ಪ್ರಸ್ತಾಪ ಮಾಡಿದರೆ ಸಂಸ್ಕೃತಿ ವಿಮರ್ಶೆ ಮಾಡುವವರಿಗೆ ಸಿಟ್ಟು ಬರುತ್ತದೆ. ಅವರಿಗೆ ಓದುಗರ ಸಂಖ್ಯೆ ಮಾನದಂಡವಲ್ಲ. ಟಾಪ್‌ಟೆನ್ ಪಟ್ಟಿಯಲ್ಲಿ ಒಂದು ಕೃತಿ ಕಾಣಿಸಿಕೊಂಡರೆ ಅದು ಕಳಪೆ ಕೃತಿ ಎಂಬ ಏಕಾಏಕಿ ತೀರ್ಮಾನಕ್ಕೆ ಅವರು ಬಂದುಬಿಡುತ್ತಾರೆ. ಆದರೆ ಅತ್ಯಂತ ಹೆಚ್ಚು ಓದುಗರನ್ನು ಹೊಂದಿದ್ದ ತೇಜಸ್ವಿಯವರ ವಿಚಾರದಲ್ಲಿ ಅದು ನಿಜವಲ್ಲ ಎನ್ನುವುದನ್ನೂ ಅವರೇ ಒಪ್ಪುತ್ತಾರೆ. ಈ ದ್ವಂದ್ವದಲ್ಲಿ ಹುಟ್ಟುವ ಎಡಬಿಡಂಗಿ ತಾತ್ವಿಕತೆ, ಹುಸಿ ಸಾಮಾಜಿಕ ಬದ್ಧತೆ ಮತ್ತು ಯುವ ಲೇಖಕರನ್ನು ಕಂಗಾಲುಮಾಡುವ ದೇಶಕಾಲ ಚಿಂತನೆಯಲ್ಲಿ ಇವತ್ತಿನ ಸಾಹಿತ್ಯಜಗತ್ತು ಡೋಲಾಯಮಾನವಾಗಿದೆ. ಏನೇ ಮಾತಾಡಿದರೂ ಬಸವಣ್ಣ, ಬುದ್ಧ ಮತ್ತು ಅಲ್ಲಮರನ್ನು ಎಳೆದು ತಂದು ಕೆಕ್ಕರಿಸಿ ನೋಡುವವರ ಪಡೆ ಒಂದು ದಿಕ್ಕಿನಲ್ಲಿದೆ. ಮತ್ತೊಂದು ಕಡೆ ಅಷ್ಟೇ ಅಪಾಯಕಾರಿಯಾದ, ಪ್ರಗತಿಶೀಲತೆಯನ್ನೂ ಬಂಡಾಯವನ್ನೂ ಸ್ತ್ರೀಸ್ವಾತಂತ್ರ್ಯವನ್ನೂ ಜಾತ್ಯತೀತ ನಿಲುವನ್ನೂ ಪ್ರಶ್ನಿಸುವ ನಿಲುವು ಕೂಡ ವ್ಯಕ್ತವಾಗುತ್ತಿದೆ. ಈ ಕವಲು-ದಾರಿಯಲ್ಲಿ ನಿಂತ ಓದುಗ ಕಕ್ಕಾಬಿಕ್ಕಿಯಾಗುವಷ್ಚರ ಮಟ್ಟಿಗೆ ಅವನನ್ನು ಗೊಂದಲಗೊಳಿಸುವುದಕ್ಕೆ ಸಕಲ ಸಿದ್ಧತೆಗಳೂ ನಡೆದಿವೆ. ಸಾಹಿತ್ಯದ ಹೊಸ ವಿದ್ಯಾರ್ಥಿಗಳಂತೂ ಯಾರನ್ನು ಓದಬೇಕು ಎನ್ನುವ ಕುರಿತು ನಿಜವಾದ ಗೊಂದಲದಲ್ಲಿ ತೊಳಲಾಡುತ್ತಿರುವಂತಿದೆ.
ಇಂಥ ಹೊತ್ತಲ್ಲಿ ಮೂವತ್ತರ ಹೊಸಿಲಲ್ಲಿರುವ ಬಂಡಾಯದ ಕೈಯಲ್ಲಿ ಕೆಂಪುಗುಲಾಬಿ ಕೂಡ ಬಣ್ಣ
ಕಳಕೊಂಡಂತೆ ಕಾಣುತ್ತಿದೆ.

Wednesday, September 15, 2010

ಕರ್ಣನ ನೆನೆನೆನೆದು..

ಸುಮ್ಮನೆ, ಸುಮ್ಸುಮ್ಮನೆ ಕರ್ಣ ಕಣ್ಮುಂದೆ ಸುಳಿಯುತ್ತಾನೆ. ಕುಂತಿಯೊಡನೆ ಕೂಡಿದ ಸೂರ್ಯ ಕರ್ಣನ ತಂದೆ. ಸೂರ್ಯ ಸುಡುತ್ತಾನೆ. ಮಗನನ್ನೂ ಸುಟ್ಟಾನು. ಕುಂತಿಗೋ ಅದು ಬೇಡದ ಕೂಸು. ಕುತೂಹಲಕ್ಕೆ ಹುಟ್ಟಿದ ಕಂದ. ಅಂಥ ಕುತೂಹಲವನ್ನು ಅವಳು ತೇಲಿ ಬಿಟ್ಟದ್ದು ಗಂಗೆಯಲ್ಲಿ. ಗಂಗೆ ಬದುಕಿದವರನ್ನು ಮುಳುಗಿಸುವುದಿಲ್ಲ ಎಂದು ಹೆಸರಾದವಳು. ಅವಳು ತೇಲಿಸಿದ ಕರ್ಣನಿಗೆ ಕೊನೆಗೂ ದಕ್ಕಿದ್ದು ಕೌಂತೇಯ, ರಾಧೇಯ, ಸೂತಪುತ್ರ ಎಂಬ ಹೆಸರು ಮಾತ್ರ.
ಎಂಥ ವಿಚಿತ್ರ ಸನ್ನಿವೇಶದಲ್ಲಿ ಕರ್ಣ ಸಿಲುಕಿಹಾಕಿಕೊಂಡ ಎನ್ನುವುದನ್ನು ನೆನೆಯಿರಿ. ಕುಂತಿ ನಿರ್ಭಾವದಿಂದ ತೊರೆದ ಕರ್ಣ, ರಥಿಕನೊಬ್ಬನ ಕೈಸೇರಿ, ತನ್ನ ಉತ್ಸಾಹ ಮತ್ತು ತೀವ್ರತೆಗೋಸ್ಕರ ಬಿಲ್ವಿದ್ಯೆ ಕಲಿತು, ದ್ರೋಣರಿಂದ ಶಾಪಗ್ರಸ್ತನಾಗಿ ಆ ಶಾಪವನ್ನು ಮೀರಬಲ್ಲೆ ಎಂಬ ಹುಮ್ಮಸ್ಸಿನಲ್ಲಿ ಬದುಕಿ, ಕೌರವನ ಆಸ್ಥಾನ ಸೇರಿ, ಅವನಿಗೂ ಪ್ರಿಯಮಿತ್ರನಾಗಿ ಬದುಕಿನಲ್ಲಿ ನೆಲೆ ಕಂಡುಕೊಂಡದ್ದು ಒಂದು ರೋಚಕ ಕತೆ. ಅವನ ಬಾಲ್ಯದ ಬಗ್ಗೆ ವಿವರಗಳೇ ಇಲ್ಲ. ಅಂಥವನ್ನು ಆ ಬಡವ ಹೇಗೆ ಬೆಳೆಸಿದ, ಕರ್ಣ ಏನೇನು ಕೇಳುತ್ತಿದ್ದ, ಏನು ಬೇಡುತ್ತಿದ್ದ, ಹೇಗೆ ಮಾತಾಡುತ್ತಿದ್ದ, ತನ್ನ ತಂದೆ ತಾಯಿ ಯಾರೆಂದು ಅವನು ಕೇಳಲೇ ಇಲ್ಲವೇ, ಅವನ ಕರ್ಣಕುಂಡಲ ಮತ್ತು ಕವಚದ ಬಗ್ಗೆ ಅವನಿಗೆ ಬೆರಗು ಮತ್ತು ಹೆಮ್ಮೆ ಇತ್ತಾ, ಅದನ್ನು ನೋಡಿದಾಗಲಾದರೂ ದ್ರೋಣನಿಗೆ ಅನುಮಾನ ಬರಲಿಲ್ಲವಾ?
ಮತ್ತೆ ನೆನಪಾಗುತ್ತಾನೆ ಭಗ್ನಪ್ರೇಮಿ ಕರ್ಣ. ಅವನು ಯಾರನ್ನು ಪ್ರೀತಿಸಿದ್ದ? ಭಾನುಮತಿಯ ಜೊತೆ ಪಗಡೆಯಾಡುತ್ತಾ ಅವಳ ಕೊರಳಹಾರಕ್ಕೆ ಕೈ ಹಾಕಿದ ಕರ್ಣನನ್ನು ಕೌರವ ಗೆಳೆಯನಂತೆ ಸ್ವೀಕರಿಸಿದ್ದು ಯಾಕೆ? ಕೌರವನಂಥ ಕೌರವನಿಗೆ ಕರ್ಣನ ಸ್ನೇಹ ಯಾತಕ್ಕೆ ಬೇಕಿತ್ತು? ಕರ್ಣನ ಶೌರ್ಯವನ್ನು ನೋಡಿ ಕೌರವ ಅವನನ್ನು ಮೆಚ್ಚಿಕೊಂಡಿದ್ದನಾ? ಸ್ನೇಹ ಹುಟ್ಟುವುದು ಮೆಚ್ಚುಗೆಯಿಂದ ಅಲ್ಲ. ಅಭಿಮಾನಿಯಾಗಿದ್ದವನು ಗೆಳೆಯನಾಗಲಾರ. ಮೆಚ್ಚಿಕೊಳ್ಳುವವರು ಎತ್ತರದಲ್ಲಿರುತ್ತಾರೆ, ಮೆಚ್ಚಿಕೆಗೆ ಒಳಗಾದವರು ಕೊನೆಯ ಮೆಟ್ಟಿಲಲ್ಲಿ ನಿಂತಿರುತ್ತಾರೆ. ಗೆಳೆಯರ ನಡುವಿನ ಮೆಚ್ಚುಗೆಯಲ್ಲಿ ಮೆಚ್ಚಿಸಲೇಬೇಕೆಂಬ ಹಟವಿಲ್ಲ. ಮೆಚ್ಚಿಸುವುದು ಅನಿವಾರ್ಯವೂ ಅಲ್ಲ.
ಕರ್ಣನ ಕುರಿತು ಪ್ರೇಮ ಕತೆಗಳಿಲ್ಲ. ಹಾಗಿದ್ದರೂ ಅವನೊಬ್ಬ ಭಗ್ನಪ್ರೇಮಿಯಾಗಿದ್ದನೇನೋ ಅನ್ನಿಸುತ್ತದೆ. ಹಸ್ತಿನಾವತಿಯ ಅರಮನೆಯ ಆವರಣದಲ್ಲಿ ಏಕಾಂಗಿಯಾಗಿ ಅಡ್ಡಾಡುತ್ತಿದ್ದ ಕರ್ಣ ಬೇರೊಬ್ಬರ ಜೊತೆ ಆಪ್ತವಾಗಿ ಮಾತಾಡಿದ ಪ್ರಸ್ತಾಪ ಕೂಡ ಮಹಾಭಾರತದಲ್ಲಿ ಇಲ್ಲ. ಅವನದೇನಿದ್ದರೂ ಏಕಾಂತವಾಸ. ಕೌರವ ಬಿಟ್ಟರೆ ಮತ್ಯಾರೂ ತನ್ನವರಲ್ಲ ಎಂದು ನಂಬಿದವನಂತೆ ಬಾಳಿ ಕರ್ಣ ಎಲ್ಲ ಸೈನಿಕರ ಹಾಗೆ ಬಾಳುತ್ತಿದ್ದ. ಅವನಿಗೂ ಮದುವೆಯಾಗಿ, ಮಕ್ಕಳಾದರು. ಕರ್ಣನಿಗೆ ಹಳೆಯದರ ನೆನಪಿರಲಿಲ್ಲ. ತನ್ನ ಹುಟ್ಟಿನ ಕುರಿತು ಜಿಜ್ಞಾಸೆಯೂ ಇರಲಿಲ್ಲ. ಅಪರಾತ್ರಿಗಳಲ್ಲಿ ಅವನು ಹಾಸಿಗೆಯಲ್ಲಿ ಎದ್ದು ಕೂತು ಏನನ್ನೋ ಹಂಬಲಿಸುವವನಂತೆ ಆಕಾಶದತ್ತ ನೋಡುತ್ತಿದ್ದ ಎಂಬುದು ಕರ್ಣನನ್ನು ಪ್ರೀತಿಸುವ ನನ್ನ ಊಹೆ ಮಾತ್ರ.
ಸೂರ್ಯ ಇದನ್ನೆಲ್ಲ ನೋಡುತ್ತಿದ್ದ. ಅವನಿಗೆ ಯಾವತ್ತೂ ಕರ್ಣನನ್ನು ಮಗನೆಂದು ಒಪ್ಪಿಕೊಳ್ಳುವ ಅಗತ್ಯ ಬರಲಿಲ್ಲ. ಅವನ ಪಾಲಿಗೆ ಕರ್ಣ ಮಗನಾದರೂ ಮಗನಲ್ಲ. ಅವನು ತಾನು ಕೊಟ್ಟ ವರ. ತನ್ನನ್ನು ಓಲೈಸಿದ, ಆರಾಧಿಸಿದ, ಸಂತೋಷಪಡಿಸಿದ ಕಾರಣಕ್ಕೆ ಮುನಿ ಕುಮಾರಿ ಕುಂತಿಗೆ ಕೊಟ್ಟ ಮಂತ್ರಕ್ಕಷ್ಟೇ ಅವನು ಬಂಧಿ. ಮಂತ್ರದ ಅಪ್ಪಣೆ ಇಷ್ಚೇ: ಕೇಳಿದಾಗ ಈ ಕುಮಾರಿಗೆ ವರ ಕರುಣಿಸು. ಅದರಾಚೆಗಿನ ಹೊರೆ, ಹೊಣೆ, ಅನುಕಂಪ ಮತ್ತು ಅಕ್ಕರೆಗೆ ಅಲ್ಲಿ ಜಾಗವಿಲ್ಲ. ಮುಂದಿನ ಮಾತುಗಳಿಗೆ ಅವನು ಕಿವುಡ. ಹೀಗಾಗಿ ಕರ್ಣ ಏನು ಮಾಡಿದರೂ ಅದು ಅವನದೇ ಜವಾಬ್ದಾರಿ. ಕುಂತಿ ಅವನನ್ನು ಗಂಗೆಯಲ್ಲಿ ತೇಲಿ ಬಿಟ್ಟಾಗಲೂ ಸೂರ್ಯ ಮೂಕಪ್ರೇಕ್ಷಕ.
ಇಂಥ ಕರ್ಣನನ್ನು ಸಂದಿಗ್ಧ ಕಾಡುವುದು ಕೇವಲ ಒಮ್ಮೆ. ಕೌರವರ ಪರವಾಗಿ ಹೋರಾಡಲು ಹೊರಟ ಕರ್ಣನನ್ನು ಕೃಷ್ಣ ಭೇಟಿಯಾಗುತ್ತಾನೆ. ಅವನಿಗೆ ಜನ್ಮರಹಸ್ಯ ಹೊತ್ತು. ಹುಟ್ಟಿನ ಗುಟ್ಟು ಬಲ್ಲವನು ಏನು ಬೇಕಾದರೂ ಮಾಡಬಲ್ಲ ಎಂದು ನಂಬಿದ್ದ ಕಾಲವಿರಬೇಕು ಅದು. ಆ ಗುಟ್ಟನ್ನು ಬಿಚ್ಚಿಟ್ಟು ಅವನು ಕರ್ಣನನ್ನು ಕಾಣುತ್ತಾನೆ.
ಕರ್ಣ ಆಗೇನು ಮಾಡಬೇಕಾಗಿತ್ತು?
ಯಾಕೋ ಕರ್ಣ ಕೊಂಚ ಮೆದುವಾದನೇನೋ ಅನ್ನಿಸುತ್ತದೆ. ಕರ್ಣ-ಕೃಷ್ಣರ ನಡುವೆ ಏನೇನು ಮಾತಾಯಿತು ಎನ್ನುವುದು ನಿಗೂಢ. ಕವಿ ಹೇಳಿದ್ದರೂ ಅದು ಅನೂಹ್ಯವೇ. ಅವರಿಬ್ಬರೂ ಏನೇನು ಮಾತಾಡಿರಬಹುದು ಎಂದು ಯೋಚಿಸುತ್ತಾ ಕೂತರೆ ನಮ್ಮ ನಮ್ಮ ಅನುಭವ ಮತ್ತು ಭಾವನೆಗೆ ತಕ್ಕಂತೆ ಉತ್ತರಗಳು ಹೊಳೆಯುತ್ತಾ ಹೋಗುತ್ತವೆ. ಕೃಷ್ಣ ನೀನೇ ಪಾಂಡವರಲ್ಲಿ ಹಿರಿಯವನು. ರಾಜ್ಯ ನಿನ್ನದೇ ಎಂದು ಕರೆಯುತ್ತಾನೆ. ಕರ್ಣ ಹೋಗಿದ್ದರೆ ಅವನಿಗೆ ರಾಜ್ಯ ಸಿಗುತ್ತಿತ್ತಾ? ಆ ಕ್ಷಣವೇ ಕರ್ಣ ಸೋಲುತ್ತಿದ್ದ. ಹೋಗದೇ ಸತ್ತ ಕರ್ಣ ಗೆದ್ದವನಂತೆ ಕಾಣುತ್ತಾನೆ. ಈ ಜಗತ್ತಿನಲ್ಲಿ ಆಮಿಷಗಳಿಗೆ ಬಲಿಯಾಗದವರೇ ನಮಗೆ ದೇವರಂತೆ ಕಾಣಿಸುತ್ತಾರೆ. ಟೆಂಪ್ಟೇಷನ್‌ಗಳನ್ನು ಮೆಟ್ಟಿನಿಲ್ಲುವುದೇ ಸಾಧನೆಯಾದರೆ, ಅಂಥ ಟೆಂಪ್ಟೇಷನ್ನುಗಳನ್ನು ಹುಟ್ಟುಹಾಕುವ ನಮ್ಮ ಮನಸ್ಸಿಗೇನು ಹೇಳೋಣ. ಆಮಿಷಗಳನ್ನು ಸೃಷ್ಟಿಸುವುದು ಮನಸ್ಸು, ಮೀರಲೆತ್ನಿಸುವುದೂ ಮನಸ್ಸು. ಮನಸೇ ಮನಸಿನ ಮನಸ ನಿಲ್ಲಿಸುವುದು.
ಕರ್ಣನನ್ನು ಕೃಷ್ಣ ಒಲಿಸುವ ರೀತಿ ವಿಚಿತ್ರವಾಗಿದೆ. ಅವನಿಗೆ ರಾಜ್ಯದ ಆಮಿಷ ಒಡ್ಡುತ್ತಾನೆ ಅವನು. ಜೊತೆಗೇ, ಧರ್ಮರಾಯ, ಭೀಮ, ಅರ್ಜುನರಂಥವರು ಸೇವೆಗೆ ನಿಲ್ಲುತ್ತಾರೆ ಎನ್ನುತ್ತಾನೆ. ಕರ್ಣನ ಮನಸ್ಸಿನಲ್ಲಿ ದ್ರೌಪದಿ ಸುಳಿದುಹೋಗಿರಬಹುದೇ ಎಂಬ ತುಂಟ ಅನುಮಾನವೊಂದು ಸುಮ್ಮನೆ ಸುಳಿಯುತ್ತದೆ; ದ್ರೌಪದಿಯ ಮನಸ್ಸಿನಲ್ಲಿ ಕರ್ಣನ ನೆರಳು ಹಾದು ಹೋದಹಾಗೆ. ಕರ್ಣನಿಗೆ ಅವೆಲ್ಲವನ್ನೂ ಧಿಕ್ಕರಿಸುವಂಥ ಧೀಮಂತ ಶಕ್ತಿ ಬಂದದ್ದಾದರೂ ಎಲ್ಲಿಂದ? ಕೌರವನ ಸ್ನೇಹದ ಬಲದಿಂದಲೇ? ಅಥವಾ ತಾನು ಕೌಂತೇಯ, ಕುಂತಿಯ ಮಗ, ಸೂರ್ಯನ ಮಗ ಎಂದು ಗೊತ್ತಾದ ನಂತರ ಕರ್ಣ ಗಟ್ಟಿಯಾಗುತ್ತಾ ಹೋದನೇ?
ಕೊನೆಗೂ ಕರ್ಣ ಅವನಿಗೊಂದು ಮಾತು ಕೊಡುತ್ತಾನೆ: ನಿನ್ನಯ ವೀರರೈವರ ನೋಯಿಸೆನು. ಈ ಮಾತನ್ನು ಕರ್ಣನಿಂದ ಹೊರಡಿಸುವಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾನೆ ಕೃಷ್ಣ. ಅಲ್ಲಿಗೆ ಕೌರವರ ಪಾಲಿಗೆ ಕರ್ಣ ನಿರುಪಯೋಗಿ. ಸೈನಿಕರನ್ನಷ್ಟೇ ಕೊಲ್ಲುತ್ತೇನೆ, ಪಾಂಡವರನ್ನು ಮುಟ್ಟುವುದಿಲ್ಲ ಎಂದು ಮಾತುಕೊಟ್ಟರೂ ಕೃಷ್ಣನಿಗೆ ಸಮಾಧಾನ ಇಲ್ಲ. ಅವನು ಮತ್ತೆ ಕುಂತಿಯನ್ನು ಕರ್ಣನೆಡೆಗೆ ಕಳುಹಿಸುತ್ತಾನೆ. ಕರ್ಣ ಜೀವನದ ಕರುಣಾಜನಕ ಸನ್ನಿವೇಶ ಅದು.
ಕುಮಾರವ್ಯಾಸ ನುರಿತ ಚಿತ್ರಕತೆಗಾರನಂತೆ ಆ ದೃಶ್ಯವನ್ನು ವರ್ಣಿಸುತ್ತಾನೆ. ಗಂಗಾತೀರದಲ್ಲಿ ಕರ್ಣ, ತಂದೆ ಸೂರ್ಯನ ಉಪಾಸನೆಯಲ್ಲಿರುವ ಹೊತ್ತಿಗೆ ಔದಾರ್ಯದ ಕಲ್ಪವೃಕ್ಷದಂತಿದ್ದ ಕುಂತಿ ಅಲ್ಲಿಗೆ ಬರುತ್ತಾಳೆ ಎನ್ನುವಲ್ಲಿ ಕುಮಾರವ್ಯಾಸನ ವ್ಯಂಗ್ಯ ಮೆರೆಯುತ್ತದೆ. ಕುಂತಿ ಬಂದದ್ದು ತಾನು ಹುಟ್ಟಿದ ತಕ್ಷಣವೇ ನೀರಲ್ಲಿ ತೇಲಿಬಿಟ್ಟ ಕರ್ಣನನ್ನು ಕೊಲಿಸುವುದಕ್ಕಲ್ಲವೇ?
ಅಲ್ಲಿ ಮತ್ತೊಂದು ವಿಚಿತ್ರವೂ ನಡೆಯುತ್ತದೆ. ಕುಂತಿಯನ್ನು ಕಂಡದ್ದೇ ತಡ, ಗಂಗೆ ನೀರಿನಿಂದೆದ್ದು ಬಂದು ನಿನ್ನ ಮಗನನ್ನು ನಾನು ಇಷ್ಟು ದಿನ ಕಾಪಾಡಿದೆ. ಈಗ ನಿನಗೆ ಒಪ್ಪಿಸುತ್ತಿದ್ದೇನೆ. ನೀನು ನನಗೆ ಕೊಟ್ಟ ಭಾಷೆಯನ್ನು ಉಳಿಸಿಕೊಂಡಿದ್ದೇನೆ ಎಂದು ಕರ್ಣನನ್ನು ಕುಂತಿಗೆ ಒಪ್ಪಿಸಿಹೋಗುತ್ತಾಳೆ. ಹೆತ್ತತಾಯಿ, ಪೊರೆದ ತಾಯಿ ಮತ್ತು ಆಕಾಶದಲ್ಲಿ ಹುಟ್ಟಿಸಿದ ತಂದೆ. ಈ ತ್ರಿಕೋನದ ನಡುವೆ ಏಕಾಂಗಿ ಕರ್ಣ. ಸೂರ್ಯನೂ ಆ ಕ್ಷಣ ಕರ್ಣನ ಬಳಿಗೆ ಬಂದು, ನಿಮ್ಮಮ್ಮನನ್ನು ನಂಬಬೇಡ, ಆಕೆ ಬಂದದ್ದು ನಿನ್ನ ಅಳಿವಿಗಾಗಿಯೇ ಹೊರತು, ಪ್ರೀತಿಯಿಂದಲ್ಲ ಅನ್ನುತ್ತಾನೆ. ಕರ್ಣನಿಗೆ ಪ್ರತಿಯೊಂದು ಮಾತೂ ಕರ್ಣಕಠೋರ.
ಕುಂತಿ ಕರ್ಣನನ್ನು ತನ್ನ ಜೊತೆಗೆ ಬಾ ಎಂದು ಕರೆದಾಗ ಕರ್ಣ ಹೇಳುವ ಮಾತು ಮಾರ್ಮಿಕವಾಗಿದೆ: ಇಂದೇನೋ ನಾನು ನಿನ್ನ ಮಗ ಎಂದು ನನಗೆ ಗೊತ್ತಾಯಿತು. ಆದರೆ ಇದ್ಯಾವುದೂ ಗೊತ್ತಿಲ್ಲದ ದಿನಗಳಲ್ಲಿ ನನ್ನನ್ನು ಕೌರವ ಸಲಹಿದ್ದಾನೆ. ಸ್ನೇಹಹಸ್ತ ಚಾಚಿದ್ದಾನೆ. ಅವನು ನನ್ನ ಕುಲ ನೋಡಲಿಲ್ಲ. ಅವನ್ನು ನಾನು ಬಿಟ್ಟು ಬರುವುದಿಲ್ಲ ಎನ್ನುತ್ತಾನೆ.
ಕುಂತಿ ಕೊನೆಗೂ ಕರ್ಣನಿಗೆ ಹೋದ ಬಾಣದ ಮರಳಿ ತೊಡದಿರು, ನನ್ನ ಐವರು ಮಕ್ಕಳನ್ನು ಕಾಪಾಡು’ ಎಂದು ಕೇಳಿಕೊಳ್ಳುತ್ತಾಳೆ. ಆರನೆಯ ಮಗನ ಹತ್ತಿರ ಐವರು ಮಕ್ಕಳನ್ನು ಕಾಪಾಡು ಎನ್ನುವ ಕುಂತಿಯ ಕ್ರೌರ್ಯವನ್ನು ಕೂಡ ಕರ್ಣ ಅನುಮಾನದಿಂದ ನೋಡುವುದಿಲ್ಲ. ಕರ್ಣ ನಿಜಕ್ಕೂ ನಿಷ್ಠುರನಾಗಿದ್ದರೆ? ಅವನಿಗೆ ದಾನಶೂರ ಎನ್ನಿಸಿಕೊಳ್ಳುವ ಹಂಬಲವೇ ಬಲವಾಗಿತ್ತಾ? ಕೇಳಿದ್ದನ್ನೆಲ್ಲ ಕೊಡುವುದು ಸದ್ಗುಣ ನಿಜ. ಅದು ಸದ್ಗುಣ ಎನ್ನಿಸಿಕೊಳ್ಳುವುದು ಕೇಳುವವರು ಯೋಗ್ಯರಾಗಿರುವ ತನಕ ಮಾತ್ರ. ಹಾಗಿಲ್ಲದೇ ಹೋದಾಗ ಕೊಡುವುದು ಕೊಡದಿರುವುದಕ್ಕಿಂತ ದೊಡ್ಡ ತಪ್ಪು.
ಒಮ್ಮೊಮ್ಮೆ ಹುಂಬನಂತೆ, ಮತ್ತೊಮ್ಮೆ ದಾರಿ ತಪ್ಪಿದವನಂತೆ, ಕೆಲವೊಮ್ಮೆ ಸೊರಗಿದವನಂತೆ, ಪ್ರೀತಿಗಾಗಿ ಕಾತರಿಸಿದವನಂತೆ, ಅಸಹಾಯಕನಂತೆ, ಅಬ್ಬೇಪಾರಿಯಂತೆ, ಒಳ್ಳೆಯ ಗೆಳೆಯನಂತೆ ಕಾಣಿಸುವ ಕರ್ಣ ಉದ್ದಕ್ಕೂ ತಪ್ಪುಗಳನ್ನು ಮಾಡುತ್ತಲೇ ಹೋದ. ನಿರಾಕರಿಸುವ ಶಕ್ತಿ ಕಳಕೊಂಡವನು ನಿರುಪಯುಕ್ತ ಅನ್ನಿಸುವುದು ಹೀಗೆ.
ವ್ಯಾಸರು ಸೃಷ್ಟಿಸಿದ ಪಾತ್ರಗಳ ಪೈಕಿ ಜಾಣತನ, ಕುಯುಕ್ತಿ ಇಲ್ಲದ ಬೋಳೇಸ್ವಭಾವದ ವ್ಯಕ್ತಿ ಕರ್ಣ. ಒಮ್ಮೊಮ್ಮೆ ಧರ್ಮರಾಯ ಕೂಡ ಅಧರ್ಮಿಯಂತೆ, ಸುಳ್ಳುಗಾರನಂತೆ ವರ್ತಿಸುತ್ತಾನೆ. ಕರ್ಣನೊಬ್ಬನೇ ನಮ್ಮಲ್ಲಿ ಅನುಕಂಪ ಮತ್ತು ಪ್ರೀತಿ ಉಕ್ಕಿಸುತ್ತಾನೆ.

Thursday, May 27, 2010

ಕತೆ-ಚಿತ್ರಕತೆ-ಸಂಭಾಷಣೆ (ಚಿತ್ರೀಕರಿಸಲಾಗದ ಒಂದು ವಿಫಲ ಸನ್ನಿವೇಶವು)

ಕತೆ:
ಬೆಂಗಳೂರು ಅಥವಾ ಬೆಂಗಳೂರಿನಂಥ ಒಂದೂರು. ಮುಂಜಾನೆ ಅಥವಾ ಮುಂಜಾನೆಯಂಥ ದಿನದ ಒಂದು ಅವಧಿ. ಇಪ್ಪತ್ತಮೂರು ವರ್ಷದ ಅಥವಾ ಇಪ್ಪತ್ತಮೂರು ವರ್ಷದವನಂತೆ ಕಾಣುವ ಹುಡುಗ. ಅವನ ಹೆಸರು ಕಿಟ್ಟಿ ಅಥವಾ ಬೇರೆ ಯಾವ ಹೆಸರಾದರೂ ಆಗಬಹುದು. ಅವನು ವೇಗವಾಗಿ ನಡೆಯುತ್ತಿದ್ದಾನೆ ಅಥವಾ ಓಡುತ್ತಿದ್ದರೂ ಓಡುತ್ತಿರಬಹುದು.
ತನ್ನನ್ನು ಯಾರು ಅಟ್ಟಿಸಿಕೊಂಡು ಬರುತ್ತಿದ್ದಾರೆ ಅನ್ನುವುದು ಅವನಿಗೂ ಗೊತ್ತಿಲ್ಲ. ಅವನು ಒಂದೇ ಸಮ ಓಡುತ್ತಲೇ ಇದ್ದಾನೆ. ಓಡುತ್ತಾ ಓಡುತ್ತಾ ಹೋಗಿ ಈ ಜಗತ್ತಿನ ಅಂತ್ಯವನ್ನು ತಲುಪುತ್ತಾನೆಯ ಅಲ್ಲಿಂದಾಚೆ ಓಡುವುದಕ್ಕೆ ನೆಲವಿಲ್ಲ, ಆಕಾಶವಿಲ್ಲ, ನೀರಿಲ್ಲ. ಇದ್ದಕ್ಕಿದ್ದಂತೆ ಅಲ್ಲಿಗೆ ಜಗತ್ತೇ ಮುಗಿದುಹೋದ ಹಾಗೆ.
ಜಗತ್ತು ಹಾಗೆ ಮುಗಿದು ಹೋಗುವುದಿಲ್ಲ ಎಂದು ಅವನಿಗೆ ಗೊತ್ತು. ಜಗತ್ತು ದುಂಡಗಿದೆ. ಇಡೀ ವಿಶ್ವ ಸುತ್ತಿದರೂ ಮತ್ತೆ ಹೊರಟಲ್ಲಿಗೇ ಬರುತ್ತಿರಬೇಕು ಅನ್ನುವುದು ಬಲ್ಲ ವಿಜ್ಞಾನದ ಹುಡುಗ ಅವನು. ಅವನು ಸುತ್ತುತ್ತಿರುವುದು ಈ ಜಗತ್ತನ್ನಲ್ಲ, ಒಳಜಗತ್ತನ್ನು. ಅದಕ್ಕೆ ಕೊನೆಯುಂಟು. ಜಗದ ಅಂಚಿಗೆ ಬಂದು ಇನ್ನೇನು ಕೆಳಗೆ ಬಿದ್ದೇ ಬೀಳುತ್ತೇನೆ ಎಂಬಂತೆ ಅವಚಿಕೊಂಡು ನಿಂತಾಗ ನೆನಪಾಗುವುದು ಅಮ್ಮ. ಇಷ್ಟಗಲ ಕುಂಕುಮದ, ಸುಕ್ಕುಮೋರೆಯ, ಚೂಪುಗಣ್ಣಿನ, ಅಪ್ಪನೊಡನೆ ಸದಾ ಜಗಳಾಡುವ, ಮನೆ ಮುಂದೆ ಬರುವ ಮಕ್ಕಳ ಕೈಗೆ ತುತ್ತು ಹಾಕುವ, ಸಾಕಿದ ನಾಯಿಯನ್ನು ಸಾಯಬಡಿಯುವ, ನೀನ್ಯಾಕಾದರೂ ಹುಟ್ಟಿದೆ ನನ್ನ ಹೊಟ್ಟೆ ಉರಿಸೋದಕ್ಕೆ ಎಂದು ಚೀರಾಡಿ ಅಳುವ ಅಮ್ಮ.
ಅಮ್ಮನ ನೆನಪಾದಾಗ ಕಣ್ಮುಂದೆ ಬರುವುದು ಅಪ್ಪ. ನಿರ್ಲಿಪ್ತನಂತೆ ಕೂತಿರುವ, ಮನಸ್ಸಿನಲ್ಲೇ ನೂರೆಂಟು ಕಳ್ಳದಾರಿಗಳನ್ನು ಹುಡುಕಿಕೊಳ್ಳುತ್ತಿರುವ, ಪಾರೋತಿಯ ಮನೆಗೆ ಹೋಗಿ ಅವಳನ್ನು ಮುದ್ದಾಡಿ ಬರುವ, ಗಂಗಣ್ಣನ ಗಡಂಗಿನಲ್ಲಿ ಸಾಲ ಕೇಳುವ, ಕೆಲಸ ಕೊಟ್ಟವರನ್ನು ಹೀನಾಮಾನ ಬೈಯುವ, ಬೆಳಗ್ಗೆ ಅವರ ಮುಂದೆಯೇ ಕೈ ಕಟ್ಟಿ ನಿಲ್ಲುವ, ಮಗನನ್ನು ವಾರೆಗಣ್ಣಿಂದ ಗಮನಿಸುತ್ತ, ಅವನು ತನ್ನ ಪ್ರತಿಸ್ಪರ್ಧಿ ಎಂಬಂತೆ ನೋಡುವ, ಖುಷಿಯಾದಾಗ ಹೆಗಲ ಮೇಲೆ ಕೂರಿಸಿಕೊಂಡು ಮಗಳನ್ನು ಸಂತೆಗೆ ಕರೆದೊಯ್ಯುವ ಅಪ್ಪ.
ಇವರಿಬ್ಬರ ಮಧ್ಯೆ ಅಕ್ಕ ಇದ್ದಾಳೆ. ಅವಳಿಗೊಬ್ಬ ಪ್ರೇಮಿ. ಅವನು ಕೂಡ ಇದೇ ಅಪ್ಪನಂಥ ಅಪ್ಪನಿಗೆ, ಅಮ್ಮನಂಥ ಅಮ್ಮನಿಗೆ ಹುಟ್ಟಿದವನು. ಕೆಲಸವೇನು ಎಂದರೆ ಕೆಲಸವಿಲ್ಲ. ಕೆಲಸವಿಲ್ಲ ಅಂದರೆ ಒಂದರೆಗಳಿಗೆ ಬಿಡುವಿಲ್ಲ. ಕೈಲಿ ಕಾಸಿಲ್ಲದಿದ್ದರೂ ಹೆಮ್ಮೆಯಿಂದ ಓಡಾಡುವ, ಸಿನಿಮಾ ನೋಡುವ, ಯಾರದೋ ಬೈಕು ತಂದು ಸುತ್ತಾಡುವ, ಯಾರಿಗೋ ಹೊಡೆದು ಹೊಡೆಸಿಕೊಂಡು ದಿನಗಟ್ಟಲೆ ಮನೆಯಿಂದಾಚೆ ಬರದ, ತಲೆಗೆ ಎಣ್ಣೆ ಹಾಕದ, ತಲೆ ಬಾಚಿಕೊಳ್ಳದ, ಬಣ್ಣಬಣ್ಣದ ಶರಟು ಹಾಕುವ ಹುಡುಗ ಅವಳ ಪ್ರೇಮಿ.
ಅಲ್ಲೊಂದು ಪುಟ್ಟ ನಾಯಿ, ಸುಳಿದು ಬರುವ ರೇಲು, ಅದರಿಂದ ಪ್ರತಿದಿನವೂ ಇಳಿಯುವ ಹತ್ತುವ ಜೀನ್ಸ್ ತೊಟ್ಟ ಹುಡುಗಿ, ಅವಳು ಕೆಲಸ ಮಾಡುವ ಕಲಾಸಿಪಾಳ್ಯಂನ ರೇಷ್ಮೆ ಅಂಗಡಿ, ಅವಳನ್ನು ಹಿಂಬಾಲಿಸುವ ಅಕ್ಕನ ಪ್ರೇಮಿ. ಅಕ್ಕನಿಗೂ ಆ ಬಗ್ಗೆ ಗುಮಾನಿ. ಅವಳು ಜೀನ್ಸ್ ತೊಟ್ಟ ಕಾರಣಕ್ಕೇ, ಅವನಿಗಿಷ್ಟ. ಒಂದು ದಿನ ಅಕ್ಕನೂ ಜೀನ್ಸ್ ತೊಟ್ಟುಕೊಂಡು ಬಂದು ಅವನಿಗೆ ದಾರಿಯಲ್ಲಿ ಎದುರಾಗಿ ಇಬ್ಬರೂ ಡಿಕ್ಕಿಹೊಡೆದು ಬಿದ್ದು, ಎದ್ದು ಕಣ್ತೆರೆದರೆ ಏಳು ಸಮುದ್ರದ ಆಚೆಗಿರುವ ನ್ಯೂಯಾರ್ಕ್.
ಆಮೇಲೊಂದು ಹಾಡು, ಹೊಡೆದಾಟ, ವಿರಹ, ಉಪದೇಶ, ನೀತಿಕತೆ, ಕ್ಲೈಮ್ಯಾಕ್ಸ್ ಮತ್ತು ಶುಭಂ.


ಚಿತ್ರಕತೆ:
ದೃಶ್ಯ -೧
ಹಗಲು/ಹೊರಾಂಗಣ
ಒಂದು ನಿರ್ಜನ ಬೀದಿ, ಓಡುತ್ತಿರುವ ಯುವಕ. ಅಟ್ಟಿಸಿಕೊಂಡು ಬರುತ್ತಿರುವ ಅನಾಮಿಕರು. ಹುಡುಗ ಓಡುತ್ತಾ ಹೋಗುತ್ತಿದ್ದಂತೆ ರಸ್ತೆ ಕೊನೆಯಾಗುತ್ತದೆ. ಇನ್ನು ಎತ್ತಲೂ ಓಡುವುದುಕ್ಕೆ ಜಾಗವೇ ಇಲ್ಲ ಎಂಬ ಸ್ಥಿತಿಗೆ ತಲುಪಿದಾಗ ಅಟ್ಟಿಸಿಕೊಂಡು ಬಂದವರು ಹುಡುಗನ ಮೇಲೆ ಆಕ್ರಮಣ ಮಾಡುತ್ತಾರೆ. ಹುಡುಗ ಅವರ ಮೇಲೆ ಮುಗಿಬಿದ್ದು ಹೋರಾಟ ನಡೆಸುತ್ತಾನೆ. ಆದರೆ ಬಂದವರ ಸಂಖ್ಯೆ ಹೆಚ್ಚಿಗೆ ಇರುವುದರಿಂದ ಅವನು ಸೋಲುತ್ತಾನೆ. ಅವನನ್ನು ಕತ್ತರಿಸಿ ಅವರು ಹೊರಡುತ್ತಾರೆ. ಛಿಲ್ಲನೆ ಚಿಮ್ಮಿದ ರಕ್ತ. ಕೆಮರಾದ ಲೆನ್ಸಿಗೆ ಚೆಲ್ಲಿಂದಂತೆ ರಕ್ತ. ರಂಗೋಲಿಯ ಹಾಗೆ ಬಿದ್ದಿರುವ ರಕ್ತ. ಪಕ್ಕದಲ್ಲಿ ಬಿದ್ದಿರುವ ಹುಡುಗನ ದೇಹದ ಒಂದು ಭಾಗ, ಭುಜ, ಒಮ್ಮೆ ಕಂಪಿಸಿ ಸುಮ್ಮನಾಗುತ್ತದೆ.
ದೃಶ್ಯ -೨
ಹಗಲು/ಹೊರಾಂಗಣ
ಅವಳು ಒಬ್ಬಳೇ ಕೂತಿದ್ದಾಳೆ. ಅವಳ ಕಣ್ಣಲ್ಲಿ ಹನಿ ನೀರು. ಎದುರಿಗೆ ಹೊಳೆ ಹರಿಯುತ್ತಿದೆ. ಅವಳು ಎದ್ದು ಮುಖ ತೊಳೆದುಕೊಳ್ಳಲು ಹೊಳೆಗಿಳಿಯುತ್ತಾಳೆ. ಬೊಗಸೆಯೊಡ್ಡಿ ಕೈತುಂಬ ನೀರು ತುಂಬಿಕೊಂಡರೆ ಅದು ನೀರಲ್ಲ ರಕ್ತ. ಅವಳು ಬೆಚ್ಚಿಬೀಳುತ್ತಾಳೆ. ಕೈಯಲ್ಲಿದ್ದ ನೀರನ್ನು ಚೆಲ್ಲಿ ಹೊಳೆಯತ್ತ ನೋಡುತ್ತಾಳೆ. ಹೊಳೆ ತುಂಬ ರಕ್ತ, ಮಾಂಸಲಖಂಡ, ಕೈ ಕಾಲು, ರುಂಡಗಳು ತೇಲಿ ಬರುತ್ತಿವೆ. ಅವಳು ಚೀತ್ಕಾರ ಮಾಡುತ್ತಾ ಓಡೋಡಿ ಬರುತ್ತಾಳೆ.
ದೃಶ್ಯ -೩
ರಾತ್ರಿ/ಒಳಾಂಗಣ/ಹೊರಾಂಗಣ
ದೀಪದ ಮುಂದೆ ಅವ್ವ ಕೂತಿದ್ದಾಳೆ. ದೀಪದ ಕುಡಿಯ ಸಮೀಪದೃಶ್ಯ. ಕ್ರಮೇಣ ಅದು ಅವ್ವನ ಕಣ್ಣಂಚಿನಲ್ಲಿರುವ ಹನಿಯಾಗುತ್ತದೆ. ಅವಳು ಭುಜದ ಮೇಲೆ ಕೈಯಿಟ್ಟು ಮಲಗಿದ್ದಾಳೆ. ಪಕ್ಕದಲ್ಲಿ ಕೆಮ್ಮುತ್ತಾ ಕೂತಿರುವ ಅಪ್ಪ, ಅವರಿಬ್ಬರ ಪಕ್ಕದಲ್ಲಿ ಅಕ್ಕ. ಅಪ್ಪನ ಮುಖದಲ್ಲಿ ಭಯವಾಗಲೀ, ನೋವಾಗಲೀ, ಅವಮಾನವಾಗಲೀ ಇಲ್ಲ. ಅಕ್ಕನ ಮುಖದಲ್ಲಿ ಸಂಕಟ ಮತ್ತು ಸಿಟ್ಟು. ಅವ್ವನ ಕಣ್ಣಲ್ಲಿ ರೋಷ. ಅವ್ವ ತಲೆಯೆತ್ತಿ ನೋಡುತ್ತಾಳೆ. ಅಪ್ಪ ಬೀಡಿ ತುಟಿಗಿಡುತ್ತಾನೆ. ಅವ್ವ ಪಕ್ಕದಲ್ಲಿದ್ದ ಸೀಮೆಎಣ್ಣೆ ಕ್ಯಾನ್ ಎತ್ತಿಕೊಂಡು ಅಪ್ಪನ ಹತ್ತಿರ ಹೋಗಿ ಅವನ ನೆತ್ತಿಗೆ ಅದನ್ನು ಸುರಿಯುತ್ತಾಳೆ. ಬೆಂಕಿಕಡ್ಡಿಗಾಗಿ ಹುಡುಕಾಡುತ್ತಾಳೆ. ಅಪ್ಪ ಭಯಗೊಂಡು ಓಡಿ ಹೋಗುತ್ತಾನೆ. ಹಾಗೆ ಓಡಿಹೋಗುತ್ತಾ ಹೋಗುತ್ತಾ ಅವನ ಮೈಗೆ ಬೆಂಕಿ ಹತ್ತಿಕೊಳ್ಳುತ್ತದೆ. ಅವ್ವ ಓಡಿ ಹೋಗಿ ಅವನ ಕೈ ಹಿಡಕೊಳ್ಳುತ್ತಾಳೆ. ಇದ್ದಕ್ಕಿದ್ದಂತೆ ಆ ದೇಹ ಅವಳ ಕೈಯ ದೊಂದಿಯಾಗುತ್ತದೆ. ಅವಳು ಅದನ್ನು ಹಿಡಕೊಂಡು ಓಡತೊಡಗುತ್ತಾಳೆ.
ದೃಶ್ಯ -೪
ರಾತ್ರಿ/ಹೊರಾಂಗಣ
ಒಂದು ಗುಡ್ಡದ ಮೇಲೆ ಕೂತಿರುವ ಅಕ್ಕ. ಅವಳ ಕೂದಲು ಜ್ಯಾಲೆಯಂತೆ ಉರಿಯುತ್ತಿದೆ. ಅವಳು ತಿರುಗಿ ನೋಡುತ್ತಾಳೆ. ಆ ಪ್ರೇಮಿ ಅಲ್ಲಿ ನಿಂತಿದ್ದಾನೆ. ಅವನು ಸೊಂಟಕ್ಕೊಂದು ತುಂಡು ಬಟ್ಟೆ ಸುತ್ತಿಕೊಂಡಿದ್ದಾನೆ. ಮೈಯೆಲ್ಲ ಕಾದು ಕಂಪಿಸುತ್ತಿದೆ. ಅಕ್ಕ ಅವನನ್ನು ನೋಡಿದವಳೇ ಹತ್ತಿರ ಹೋಗಿ ಅವನನ್ನು ತಳ್ಳುತ್ತಾಳೆ. ಅವನು ಕಮರಿಯಿಂದ ಬೀಳಬೇಕು ಅನ್ನುವಷ್ಟರಲ್ಲಿ ತಾನೂ ಅವನನ್ನು ಹಿಡಿದುಕೊಳ್ಳುತ್ತಾಳೆ. ಇಬ್ಬರೂ ಕಣಿವೆಗೆ ಬೀಳುತ್ತಾ ಬೀಳುತ್ತಾ ಚುಂಬಿಸುತ್ತಾರೆ. ನೋಡನೋಡುತ್ತಿದದ ಹಾಗೇ ಹಕ್ಕಿಯಾಗಿ ಹಾರುತ್ತಾರೆ. ಕಣಿವೆಯ ಕಲ್ಲಿನಾಚೆಗೆ, ಆ ಹಕ್ಕಿಗಳನ್ನು
ಗುಂಡಿಟ್ಟು ಸಾಯಿಸಲು ಕಾದು ಕೂತ ಮೀಸೆಯವನು ಗುಂಡು ಹಾರಿಸುತ್ತಾನೆ. ಗುಂಡಿನ ಸದ್ದಿನ ಬೆನ್ನಿಗೇ ಆಕಾಶ ರಕ್ತಸಿಕ್ತ ಕೆಂಪು. ಎಲ್ಲವೂ ಸ್ತಬ್ಧ.
ದೂರದಲ್ಲಿ ಎಲ್ಲೋ ಅವ್ವನ ಚೀತ್ಕಾರ ಕೇಳಿಸುತ್ತಿದೆ. ವೇಗವಾಗಿ ಚಲಿಸುತ್ತಿರುವ ಕೆಮರಾ. ಎಲ್ಲವನ್ನು ಹಿಂದಿಕ್ಕಿಕೊಂಡು ಮುಂದೆ ಸಾಗುತ್ತಾ ಸಾಗುತ್ತಾ ಥಟ್ಟನೆ ನಿಲ್ಲುತ್ತದೆ.
ಅಲ್ಲಿ ಒಂದು ಮುಚ್ಚಿದ ಬಾಗಿಲು. ಅದು ನಿಧಾನವಾಗಿ ತೆರೆದುಕೊಳ್ಳುತ್ತದೆ. ಅದರಾಚೆಗೆ ನೋಡಿದರೆ ಬರೀ ಶೂನ್ಯ. ಜನರಿಲ್ಲದ, ಕಾಡಿಲ್ಲದ, ಆಕಾಶ ಇಲ್ಲದ, ಯಾರೂ ಇಲ್ಲದ ನಾಡು.
ದೃಶ್ಯ -೫
ರಾತ್ರಿ/ಹೊರಾಂಗಣ
ಮರದ ನೆರಳು, ಚಂದಿರನ ಬೆಳಕು. ಅವರಿಬ್ಬರೂ ಪ್ರೀತಿ ಮಾಡುತ್ತಿದ್ದಾರೆ. ದೇಹಗಳು ಉರುಳಾಡುತ್ತಿವೆ. ಪೊದೆಯ ಮರೆಯಿಂದ ಸರ್ಪವೊಂದು ಬಂದು ಅವರಿಬ್ಬರನ್ನೂ ಸುತ್ತಿಕೊಳ್ಳುತ್ತದೆ. ಅದರ ಪರಿವೆಯೂ ಇಲ್ಲದಂತೆ ಸರ್ಪವನ್ನು ಮೈ ಮೇಲಿನ ಬಟ್ಟೆಯಂತೆ ಭಾವಿಸುತ್ತಾ ಅವರು ಪ್ರೀತಿಮಗ್ನ. ಆಕಾಶದಲ್ಲಿ ಹಾರುತ್ತಿರುವ ಗರುಡ. ಆ ಪಕ್ಷಿ ಹಾರುತ್ತಾ ಹಾರುತ್ತಾ ಬಂದು, ಅವರಿಬ್ಬರ ಸಮೇತ ಸರ್ಪವನ್ನೂ ಎತ್ತಿಕೊಂಡು ಹೋಗುತ್ತದೆ. ಸಾಗರಗಳ ಮೇಲೆ ಹಾರುತ್ತಿರುವ ಗರುಡ.
ಇದ್ದಕ್ಕಿದ್ದಂತೆ ಗರುಡನ ಕಣ್ಣಿಗೆ ಮತ್ತೊಂದು ಸರ್ಪ ಕಾಣಿಸುತ್ತದೆ. ಕೊಕ್ಕಿನಲ್ಲಿ ಕಚ್ಚಿಕೊಂಡಿರುವ ಸರ್ಪವನ್ನು ಬಿಟ್ಟು, ಅದು ಆಗಷ್ಟೇ ಕಂಡ ಸರ್ಪದತ್ತ ಧಾವಿಸುತ್ತದೆ. ಆ ಸರ್ಪ, ಅದು ಸುತ್ತಿಕೊಂಡಿರುವ ಅವರಿಬ್ಬರು, ಆಕಾಶದಲ್ಲಿ ತೇಲುತ್ತಾ ತೇಲುತ್ತಾ ಬೇರೆ ಬೇರೆಯಾಗಿ ಎಲ್ಲೆಲ್ಲೋ ಬೀಳುತ್ತಾರೆ.
ಅವನು ಬಿದ್ದ ಜಾಗದಲ್ಲಿ ಮಹಾನಗರ. ಅವಳು ಬಿದ್ದ ಜಾಗದಲ್ಲಿ ಮಹಾರಣ್ಯ ಮತ್ತು ಸರ್ಪಬಿದ್ದ ಜಾಗದಲ್ಲಿ ಮಹಾಸಮುದ್ರವೊಂದು ಹುಟ್ಟಿಕೊಂಡು....

ಸಂಭಾಷಣೆ:

ಅವ್ವ: ಬೆಂಕಿ ಬೇಕು ನಂಗೆ. ಬೆಂಕಿ. ನನ್ನ ಮಗನ ಕಣ್ಣಲ್ಲೂ ಬೆಂಕಿಯಿಲ್ಲ, ಮಗಳ ಮೈಯಲ್ಲೂ ಬೆಂಕಿಯಿಲ್ಲ. ದರಿದ್ರ ಬಡಿದ ಜನ. ರೊಚ್ಚಿಗೇಳದ ಮನುಷ್ಯರು. ಓಡಿಹೋಗೋ ಮಂದಿ. ಬಸ್ಸು, ಕಾರು, ವಿಮಾನ, ಸೈಕಲ್ಲು, ಮೋಟರ್ ಸೈಕಲ್ಲು ಏನಾದ್ರೊಂದು ಹಿಡಕೊಂಡು ತಪ್ಪಿಸಿಕೊಳ್ಳೋಕೆ ನೋಡೋ ಶನಿಗಳು. ಇವರನ್ನು ಹುಟ್ಟಿಸೋದೇ ತಪ್ಪು.. ಬೆಳೆಸೋದೂ ತಪ್ಪು. ಕೊಚ್ಚಿ ಹಾಕ್ರೋ ಎಲ್ಲರನ್ನೂ..
ಮಗ: ಓಡ್ತಾನೇ ಇರಬೇಕು. ಓಡ್ತಾನೇ ಇರಬೇಕು. ಎಲ್ಲಿಗೆ ಹೋಗಿ ಮುಟ್ತೀನಿ ಅಂತ ಗೊತ್ತಿಲ್ಲದೇ ಇದ್ರೂ ಓಡ್ತಾನೇ ಇರಬೇಕು. ನಿಂತ್ರೆ ಭಯ ಆಗುತ್ತೆ. ನಿಂತೇಬಿಟ್ಟೆ ಅನ್ಸುತ್ತೆ. ಓಡ್ತಿದ್ರೆ ಏನೋ ಒಂದು ಸಮಾಧಾನ. ಕಾಲಿಗೆ ದಣಿವಾಗುತ್ತೆ, ನಿದ್ದೆ ಬರುತ್ತೆ. ಮತ್ತೆ ಎದ್ದು ಓಡ್ತಾ ಇರೋದು. ಕಾರಿಗಿಂತ ಬಸ್ಸಿಗಿಂತ ವಿಮಾನಕ್ಕಿಂತ ರೈಲಿಗಿಂತ ವೇಗವಾಗಿ ಓಡೋದು.
ಅಕ್ಕ: ನನ್ನ ಕೂದಲಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರೀತಿದೆ. ಎಲ್ಲೂ ಒಂಚೂರು ನೀರಿಲ್ಲ, ನಾನು ತಲೆ ತೊಳ್ಕೋಬೇಕು. ನೀರಲ್ಲಿ ನೆತ್ತಿ ಅದ್ದಬೇಕು. ಬೆಂಕಿ ಆರಿಸ್ಕೋಬೇಕು. ಸುಟ್ಟು ಬೂದಿಯೂ ಆಗದ, ಹೊತ್ತಿ ಬತ್ತಿಯೂ ಆಗದ, ನೆತ್ತಿ ಭಸ್ಮವೂ ಆಗದ ಈ ಬೆಂಕಿ ಬೇಡ ನಂಗೆ.. ಆರಿಸ್ರೋ ಯಾರಾದ್ರೂ... ಯಾರೂ ಇಲ್ವೇ ಅಲ್ಲಿ..
ಪ್ರೇಮಿ; ಅವಳು ಕೇಳಿದ್ದೆಲ್ಲ ಕೊಟ್ಟೆ. ಕೇಳದೇ ಇದ್ದಿದ್ದನ್ನೂ ಕೊಟ್ಟೆ. ಮತ್ತೂ ಬೇಕು ಅಂತಿದ್ದಾಳೆ. ಖಂಡವಿದೆಕೋ ಮಾಂಸವಿದೆಕೋ ಅಂದ್ರೇನೇ ಅವಳಿಗೆ ಸಂತೋಷ. ಆದ್ರೆ ಅವಳು ಹುಲಿ ಥರ ಬೆಟ್ಟದಿಂದ ಹಾರಿ ಪ್ರಾಣ ಬಿಡಲ್ಲ. ಬೇಟೆ ಆಡ್ತಾಳೆ. ನನ್ನನ್ನೇ ಬೇಟೆ ಆಡ್ತಾಳೆ. ನನ್ನ ಮುಟ್ಟಿ ಬೇಟೆ ಆಡ್ತಾಳೆ. ಮುಟ್ಟದೇ ಬೇಟೆ ಆಡ್ತಾಳೆ. ಬೇರೆಯವರ ಜೊತೆ ನಗ್ತಾ ನಗ್ತಾ ಬೇಟೆಯಾಡ್ತಾಳೆ. ಮುನಿಸಿಕೊಂಡು ಬೇಟೆಯಾಡ್ತಾಳೆ. ಬೇಕು ಅನ್ನಿಸಿ, ಬೇಡ ಅನ್ನಿಸಿ ಬರೀ ಬೇಟೆ ಆಡ್ತಾಳೆ.
ದೇವರು: ಇಲ್ಲದೇ ಇದ್ದಿದ್ದನ್ನು ಹುಡುಕ್ತಾರೆ, ಇದ್ದಿದ್ದು ಬೇಡ ಅಂತಾರೆ. ನಾನಿದ್ದೀನೋ ಇಲ್ವೋ ಅಂತ ನಂಗೇ ಗೊತ್ತಿಲ್ಲ. ಅವರಿಗೆ ಗೊತ್ತು. ನನ್ನ ಹುಡುಕೋದಕ್ಕೆ ಜ್ಯೋತಿಷ್ಯ, ಶಾಸ್ತ್ರ, ಕುಂಡಲಿ, ಜಾತಕ, ದೇವಸ್ಥಾನ, ಬ್ರಹ್ಮಕಲಶ, ಬಲಿ, ದಾನ, ಧರ್ಮ. ನಾನೇ ಇಲ್ಲ. ನಾನು ನೀನೇ ಅಂದ್ರೆ ಕೇಳಲ್ಲ.
ಬಡ್ಡೀಮಕ್ಳಾ.. ನಾನು ಸತ್ತೋಗಿದ್ದೀನಿ ಕಣ್ರೋ....

Wednesday, May 12, 2010

ಬೇಸಗೆಯಲ್ಲಿ ಕುರಿತು ಚಳಿಗಾಲದ ನಿರರ್ಥಕತೆಯನ್ನು ನೆನೆಯುತ್ತಾ..

ಬೆಂಗಳೂರಿನ ಬೇಸಗೆಯ ಬಣ್ಣ ಯಾವುದು ಒಂದು ಯೋಚಿಸುತ್ತಿದ್ದೆ. ನಮ್ಮರಲ್ಲಂತೂ ಬೇಸಗೆ ಸುಡುಹಳದಿ. ಮಳೆಗಾಲ ಕಡು ಹಸಿರು. ಚಳಿಗಾಲಕ್ಕೂ ಬೇಸಗೆಗೂ ಅಂಥ ವ್ಯತ್ಯಾಸವಿಲ್ಲ. ಒಂದಷ್ಟು ಮರಗಳು ಎಲೆಯುದುರಿಸಿ ನಿಂತದ್ದು ಬಿಟ್ಟರೆ, ಹಗಲಿಡೀ ಅದೇ ಸುಡುವ ಸೂರ್ಯ ಮತ್ತು ಆ ಬೆಳಕಲ್ಲಿ ಮತ್ತಷ್ಟು ಚಪ್ಪಟೆಯಾಗಿ ಕಾಣುವ ಚಿತ್ರಗಳು.
ಆದರೆ ಬೆಂಗಳೂರಲ್ಲಿ ಹಾಗಲ್ಲ. ಅಲ್ಲಿ ಋತುಗಳು ಬದಲಾದದ್ದೇ ಗೊತ್ತಾಗುವುದಿಲ್ಲ. ಇದೀಗ ವಸಂತ ಋತು ಅನ್ನುವುದಾಗಲೀ, ಇದು ಶಿಶಿರ ಅನ್ನುವುದಾಗಲೇ ಪ್ರಕೃತಿಯಿಂದ ಗೊತ್ತಾಗಬೇಕೇ ಹೊರತು ಕ್ಯಾಲೆಂಡರಿನಿಂದಲ್ಲ. ಬೆಂಗಳೂರಿನಿಂದ ಕೊಂಚ ಆಚೆಗೆ ಹೋದರೆ ಮುಂಜಾನೆ ಹೊತ್ತಲ್ಲಿ ದಟ್ಟ ಮಂಜು ಕವಿದಿರುತ್ತದೆ. ಆದರೆ ಬೆಂಗಳೂರಲ್ಲಿ ಮಂಜು, ಮಳೆ ಮತ್ತು ಬಿಸಿಲು ಮೂರೂ ಅಕಾಲಿಕ. ಇಲ್ಲಿ ಮಳೆಯಾದರೂ ಅದು ಬ್ರೇಕಿಂಗ್ ನ್ಯೂಸ್.
ನನಗೆ ಬೇಸಗೆ ಇಷ್ಟ. ಬೇಸಗೆಯಲ್ಲಿ ಪ್ರಕೃತಿ ಉಳಿದೆಲ್ಲ ಕಾಲಕ್ಕಿಂತ ಸಮೃದ್ಧವಾಗಿರುತ್ತದೆ. ಬೇಸಗೆಯ ಆರಂಭಕ್ಕೆ ಎಲ್ಲ ಮರಗಳೂ ಹೂ ಬಿಡುತ್ತವೆ. ನಡುಬೇಸಗೆಯ ಹೊತ್ತಿಗೆ ಫಲವತಿ ಪೃಥ್ವಿ. ಮಾವಿನ ಹಣ್ಣು, ಗೇರುಹಣ್ಣು, ನೇರಳೆ, ಪೇರಲ ಮತ್ತು ಹೆಸರಿಲ್ಲದ ನೂರೆಂಟು ಹಣ್ಣುಗಳ ಸುಗ್ಗಿಕಾಲ ಅದು. ಜಂಬುನೇರಳೆಯೆಂಬ ರುಚಿರುಚಿಯಾದ ಹಣ್ಣಿಗೆ ಮನಸ್ಸು ಹಂಬಲಿಸುತ್ತದೆ. ತುಮಕೂರು, ಗುಬ್ಬಿ, ಚಿಕ್ಕಮಗಳೂರು ಮುಂತಾದ ಕಡೆ ತಾಳೆಗಿಡಗಳು ಖರ್ಜೂರದ ರುಚಿಯ ಹೊಂಬಣ್ಣದ ಹಣ್ಣನ್ನು ಮೈತುಂಬ ತುಂಬಿಕೊಂಡು ಆಕರ್ಷಿಸುತ್ತವೆ.
ಇಂಥ ಬೇಸಗೆಯಲ್ಲೇ ಎಷ್ಟೋ ಸಲ ಕಾದಂಬರಿಗೊಂದು ವಸ್ತು ಸಿಗುತ್ತದೆ. ಯಾರೋ ಬರೆದ ರುಚಿಕಟ್ಟಾದ ಕಾದಂಬರಿಯೊಂದು ಹೇಗೋ ಕೈ ಸೇರುತ್ತದೆ. ಮೊನ್ನೆ ಹಾಗೇ ಆಯ್ತು. ಯುಸುನಾರಿ ಕವಾಬಾಟ ಎಂಬ ಜಪಾನ್ ಕಾದಂಬರಿಕಾರ ಬರೆದ ಸಾವಿರ ಪಕ್ಷಿಗಳು’ ಎಂಬ ಪುಟ್ಟ ಕಾದಂಬರಿ ಹೇಗೋ ಕೈಸೇರಿತು. ಹಳೆಯ ಕಾಲದ ಕಾದಂಬರಿ ಎಂದುಕೊಂಡು ನಿರ್ಲಕ್ಷಿಸಿದ್ದನ್ನು ಸೆಕೆಗೆ ನಿದ್ದೆ ಬಾರದ ರಾತ್ರಿ ಕೈಗೆತ್ತಿಕೊಂಡಾಗ ಬೆಳಗಿನ ತನಕ ಓದಿಸಿಕೊಂಡಿತು.
ತುಂಬ ವಿಚಿತ್ರವಾಗಿ ಬರೆಯುತ್ತಾನೆ ಕವಾಬಾಟ. ಕಿಕುಜಿ ಎಂಬ ಹುಡುಗನ ಕತೆ ಅದು. ಕಾದಂಬರಿಯಲ್ಲಿ ಎಲ್ಲೂ ತುಂಬ ಅಚ್ಚರಿ ಹುಟ್ಟಿಸುವ ಚಿತ್ರಗಳು ಎದುರಾಗುವುದಿಲ್ಲ. ಆ ಪುಟ್ಟ ಹುಡುಗ ತನ್ನ ತಂದೆಯನ್ನು ಗೆಲ್ಲುವ ಕತೆ ಅದು ಅಂತ ಮುನ್ನುಡಿ ಓದಿದ ಮೇಲೆ ನನಗೂ ಅನ್ನಿಸಿತು. ಕಾದಂಬರಿಯನ್ನಷ್ಟೇ ಓದಿದಾಗ ನೆನಪಾದದ್ದು ನಮ್ಮ ಬಾಲ್ಯ. ನಮ್ಮೂರು, ನಮ್ಮೂರಿನ ರೂಪಸಿಯರು ಮತ್ತು ಎಲ್ಲರೂ ಸಿಟ್ಟಿನಿಂದ ನೋಡುತ್ತಿದ್ದ ಆದರೆ, ನಮ್ಮಂಥ ಹುಡುಗರಲ್ಲಿ ಕುತೂಹಲ ಹುಟ್ಟಿಸುತ್ತಿದ್ದ ದಿಟ್ಟೆಯರು.
ಹೇಗೆ ನಮ್ಮ ಅಭಿಪ್ರಾಯಗಳು ಬದಲಾಗುತ್ತಾ ಹೋಗುತ್ತವೆ ಎಂದು ಯೋಚಿಸುತ್ತೇನೆ. ಚಿಕ್ಕವರಿದ್ದಾಗ ಈ ರೂಪಸಿಯರು ಅಮ್ಮನ ಕಣ್ಣಿಗೋ ಅತ್ತಿಗೆಯ ಕಣ್ಣಿಗೋ ಸವತಿಯರ ಹಾಗೆ, ಸ್ಪರ್ಧಿಗಳ ಹಾಗೆ ಕಾಣಿಸುತ್ತಾರೆ ಎಂದು ನಮಗೆ ಅನ್ನಿಸಿರಲೇ ಇಲ್ಲ. ಅವರ ಜೀವನೋತ್ಸಾಹ, ಗಟ್ಟಿ ನಗು, ಆತ್ಮವಿಶ್ವಾಸ, ನಾಜೂಕು ಎಲ್ಲವೂ ಇಷ್ಟವಾಗುತ್ತಿತ್ತು. ಆದರೆ ಅದನ್ನು ಅದುಮಿಡುವ, ಹೀಗಳೆಯುವ ಹೆಂಗಸರನ್ನೂ ನೋಡಿದ್ದೆ. ಒಂದು ಹೊಸ ಸ್ನೇಹ ಅರಳಬಹುದು ಎಂಬ ನಿರೀಕ್ಷೆಯಲ್ಲಿ ಗಂಡಸರೂ ಆತಂಕದಲ್ಲಿ ಹೆಂಗಸರೂ ಬದುಕುತ್ತಿರುತ್ತಾರೆ ಎಂದು ಆಮೇಲೆ ಗೊತ್ತಾಯಿತು. ಈಗ ಅಂಥ ಆತಂಕ ಹುಡುಗರಲ್ಲೂ ಮನೆ ಮಾಡಿಕೊಂಡಿದೆ. ತನ್ನನ್ನು ಪ್ರೀತಿಸುವ ಹುಡುಗಿಯನ್ನು ತನಗಿಂತ ಸುಂದರನೊಬ್ಬ ಆಕರ್ಷಿಸಬಹುದು. ಅಷ್ಟಕ್ಕೂ ಅವಳಿಗೆ ಸೌಂದರ್ಯವಷ್ಟೇ ಮುಖ್ಯವಾಗದೇ ಹೋಗಬಹುದು. ಅವನ ಮಾತು, ಸಾಂತ್ವನ, ಧಾರಾಳತನ, ಮುಗ್ಧತೆ, ಸಂಕೋಚಗಳೂ ಅವಳನ್ನು ಸೆಳೆಯಬಹುದಲ್ಲ ಎಂದು ಅನೇಕರು ಯೋಚಿಸುತ್ತಾರೆ. ಹಿಂದಿನ ಕಾಲದಲ್ಲಿ ಆಗುತ್ತಿದ್ದ ಹಾಗೆ, ಮದುವೆಯೆಂಬ ಬಂಧನ ಗಂಡನ್ನಾಗಲೀ ಹೆಣ್ಣನ್ನಾಗಲೀ ಕಟ್ಟಿಹಾಕಲಾರದು.
ಕವಾಬಾಟನ ಕಾದಂಬರಿಯಲ್ಲೂ ಅದೇ ಆಗುತ್ತದೆ. ಅವನ ಅಪ್ಪನಿಗೆ ಇಬ್ಬರು ಪ್ರೇಯಸಿಯರು: ಚಿಕಕೋ ಮತ್ತು ಓಟ. ಅವಳಲ್ಲಿ ಒಬ್ಬಳು, ಇನ್ನೊಬ್ಬಳಿಂದ ಕಿಕುಜಿಯನ್ನು ಕಾಪಾಡಲು ಹೆಣಗಾಡುತ್ತಿರುತ್ತಾಳೆ. ಕೊನೆಗೂ ಕಿಕುಜಿಯನ್ನು ಆ ಇನ್ನೊಬ್ಬಳೇ ಸೆಳೆಯುತ್ತಾಳೆ. ಅವಳ ಪ್ರೀತಿಯಲ್ಲೊಂದು ಸಹಜತೆ ಅವನಿಗೆ ಕಾಣಿಸುತ್ತದೆ. ತಾನು ತಪ್ಪು ಮಾಡುತ್ತಿದ್ದೇನೆ ಎಂದು ಆಕೆಯೇ ಹೇಳಿಕೊಂಡರು ಕೂಡ ಕಿಕುಜಿಗೆ ಪಾಪಪ್ರಜ್ಞೆ ಕಾಡುವುದಿಲ್ಲ.
ಅವನನ್ನು ಇಮುನಾರ ಎಂಬ ಹುಡುಗಿಗೆ ಕೊಟ್ಟು ಮದುವೆ ಮಾಡುವುದು ಚಿಕಕೋಳ ಉದ್ದೇಶ. ಕಿಕುಜಿಗೂ ಅವಳು ಮತ್ತು ಅವಳ ಕೈಯಲ್ಲಿರುವ ಸಾವಿರ ಕ್ರೌಂಚಪಕ್ಷಿಗಳ ಕರ್ಚೀಫು ಇಷ್ಟ. ಆದರೆ ಸಂಬಂಧಗಳ ಮಾತು ಬಂದಾಗ ಅವನು ವರ್ತಿಸುವ ರೀತಿಯೇ ಬೇರೆ. ತನ್ನ ಅಪ್ಪನನ್ನು ಸೆಳೆದುಕೊಂಡಿದ್ದ ಓಟಾಳ ಸಂಗ ಅವನಿಗೆ ಹಿತವೆನ್ನಿಸುತ್ತದೆ. ಅದಕ್ಕೆ ಕಾರಣ ಅವನಿಗೆ ಓಟಾಳ ಮೇಲಿರುವ ಪ್ರೀತಿಯೋ, ಅಪ್ಪನ ಮೇಲಿರುವ ದ್ವೇಷವೋ ಅನ್ನುವುದೂ ಅರ್ಥವಾಗುವುದಿಲ್ಲ. ಇಂಥ ಅನಿರೀಕ್ಷಿತ ಘಟನೆಗಳ ಮೂಲಕವೇ ಇಡೀ ಕತೆ ಸಾಗುತ್ತದೆ. ಅವು ನಮ್ಮ ಪಾಲಿಗೆ ಅನಿರೀಕ್ಷಿತ, ಕತೆಯ ಪಾತ್ರಕ್ಕಲ್ಲ ಎಂಬ ಕಾರಣಕ್ಕೆ ಅದು ಇಷ್ಟವಾಗುತ್ತದೆ.
ಇಂಥ ಸರಳ ಕತೆಗಳನ್ನು ಓದುವುದು ಸದ್ಯದ ಖುಷಿ. ಬೇಸಗೆಯ ಮಧ್ಯಾಹ್ನಗಳಲ್ಲಿ ಸುಮ್ಮನೆ ಕೂತಾಗ ಕಾರಂತರ ಸರಸಮ್ಮನ ಸಮಾಧಿ’ಯ ಸರಸಿ, ಸೀತಕ್ಕ ಕಣ್ಮುಂದೆ ಬರುತ್ತಾರೆ. ಅವರ ಮೂಲಕ ಕಾದಂಬರಿಯನ್ನು ನೋಡಬೇಕು ಅನ್ನಿಸುತ್ತದೆ. ಇದ್ದಕ್ಕಿದ್ದ ಹಾಗೆ ಜe-ಟಿqಡ್ಡ್ಛಿಡ್ಝ್ಟಿಟಿ ಥಿಯರಿ ನೆನಪಾಗುತ್ತದೆ. ಓದಿದ ಕತೆಯನ್ನು ಮತ್ತೊಂದು ಕ್ರಮದಲ್ಲಿ ಅರ್ಥ ಮಾಡಿಕೊಳ್ಳುವ ಪ್ರಯತ್ನವಂತೆ ಅದು. ಲೇಖಕನ ದೃಷ್ಟಿಕೋನ ಬದಿಗಿಟ್ಟು, ಮತ್ತೊಂದು ಪಾತ್ರದ ದೃಷ್ಟಿಕೋನದಿಂದ ನೋಡಿದಾಗ ಕಾದಂಬರಿಯ ನೆಲೆಯೇ ಬದಲಾಗಬಹುದಲ್ಲ. ಉದಾಹರಣೆಗೆ ನನ್ನವಳು ನನ್ನೆದೆಯ ಹೊನ್ನಾಡನಾಳುವಳು, ಬೆಳಗುಗೆನ್ನೆಯ ಚೆಲುವೆ ನನ್ನ ಹುಡುಗಿ ಕವಿತೆಯಲ್ಲಿ ಬಂಗಾರದೊಡವೆಗಳ ಬಯಸಿಲ್ಲ ಮನಸಿನಲಿ, ಬಂಗಾರದಂಥ ಹುಡುಗಿ ಎಂಬ ಸಾಲು ಬರುತ್ತದೆ. ಇದು ಕವಿಯ ಆಶಯವೋ ಅವಳ ಸ್ಥಿತಿಯೋ ಅನ್ನುವುದು ನಮಗೆ ಗೊತ್ತಿಲ್ಲ. ನಮಗೂ ಕೂಡ ಬಂಗಾರದೊಡವೆಗಳ ಬಯಸದ ಬಂಗಾರದಂಥ ಹುಡುಗಿ ಆ ಕ್ಷಣ ಇಷ್ಟವಾಗುತ್ತಾಳೆ. ಅದೇ, ಡಿವಿಜಿಯವರ ಅಂತಃಪುರಗೀತೆ ಏನೀ ಮಹಾನಂದವೇ’ ಕವಿತೆಯಲ್ಲಿ ಆಭರಣ ಕೊಟ್ಟುಕೊಂಡ ಸುಂದರಿಯ ವರ್ಣನೆ ಬರುತ್ತದೆ. ಆಗ ನಮಗೆ ಆಭರಣಗಳಿಂದ ಅಲಂಕೃತಳಾದ ಹುಡುಗಿ ಇಷ್ಟವಾಗತೊಡಗುತ್ತಾಳೆ. ಹೀಗೆ ನಮ್ಮೊಳದೇ ಒಂದು ಸಂಘರ್ಷವೋ ವಿರೋಧಾಭಾಸವೂ ಸೃಷ್ಟಿಯಾಗುತ್ತದೆ. ಅದನ್ನು ನಾವು ಹೇಗೆ ಮೀರುತ್ತೇವೆ ಅನ್ನುವುದು ನಿಜಕ್ಕೂ ನಮ್ಮ ಮುಂದಿರುವ ಸವಾಲು.
ಬೇಸಗೆಯಲ್ಲಿ ವಿಚಿತ್ರವಾದ ಹೂವುಗಳೂ ಅರಳುತ್ತವೆ. ಸುಗಂಧ ಬೀರುತ್ತಾ ಇಡೀ ಕಾಡನ್ನೇ ಪುಷ್ಪವತಿಯನ್ನಾಗಿ ಮಾಡುತ್ತವೆ. ಅವುಗಳತ್ತ ನಮ್ಮ ಕಣ್ಣೇ ಹಾಯುವುದಿಲ್ಲ. ತೇಜಸ್ವಿಯ ಕಾದಂಬರಿಯಲ್ಲಿ ಬರುವ ಹಕ್ಕಿಗಳ ಹೆಸರನ್ನಷ್ಟೇ ಕೇಳಿ ಖುಷಿಪಟ್ಟಿದ್ದ ಗೆಳೆಯ, ಅದ್ಭುತ ಛಾಯಾಗ್ರಾಹಕ ಸತ್ಯಬೋಧ ಜೋಶಿ, ಅವನ್ನೆಲ್ಲ ಚಾರ್ಮಾಡಿ ಘಾಟಿಯ ಉದ್ದಕ್ಕೂ ನೋಡಿದಾಗ ಬೆರಗಾದರು. ಸಾಹಿತ್ಯದಿಂದಲೋ ಸುತ್ತಾಟದಿಂದಲೋ ಏನು ಉಪಯೋಗ ಎಂದು ಕೇಳುವವರಿಗೆ ಅವರ ಮಾತು ಉತ್ತರವಾಗಬಹುದು: ಇಂಥ ಪ್ರಯಾಣ ನಂಗಿಷ್ಟ. ನನ್ನ ಮಗಳಿಗೆ ಮುಂದೆ ನಾನು ಇಂಥ ಕಡೆ ಹೋಗಿದ್ದೆ, ಇಂಥ ಹಕ್ಕಿ ನೋಡಿದ್ದೆ ಅಂತ ಹೇಳಬಹುದು. ಇಲ್ಲದೇ ಹೋದರೆ ನಾನೇನು ಹೇಳಲಿ, ನನ್ನ ಜಗತ್ತು ಯಾವುದು ಅಂತ ಹೇಗೆ ತೋರಿಸಲಿ. ನನ್ನಲ್ಲಿ ಅವಳಿಗೆ ತೋರಿಸೋದಕ್ಕೆ ದೊಡ್ಡ ಮನೆಯೋ ವೈಭವದ ಬದುಕೋ ಇಲ್ಲ. ಅವಳಿಗೆ ನಾನು ಕೊಡಬಹುದಾದದ್ದು ನನ್ನ ಇಂಥ ಅನುಭವದ ತುಣುಕೊಂದನ್ನು ಮಾತ್ರ.
ಮಕ್ಕಳಿಗೆ ಅವೆಲ್ಲ ಬೇಕಾ ಎಂಬ ಪ್ರಶ್ನೆಯೂ ಇಂಥ ಹೊತ್ತಲ್ಲಿ ಅನೇಕರನ್ನು ಕಾಡೀತು. ಆದರೆ ಎರಡೂ ಜಗತ್ತನ್ನು ಕಂಡುಕೊಳ್ಳುವುದು ಅವರವರ ಭಾಗ್ಯ. ಆದರೆ ಅದಕ್ಕೆ ಬೇಕಾದ ಅವಕಾಶವನ್ನಷ್ಟೇ ನಾವು ಕಲ್ಪಿಸಬಹುದು. ನಮ್ಮ ಬಾಲ್ಯದ
ಜಗತ್ತೂ ಹಾಗೇ ಇತ್ತೆಂದು ಕಾಣುತ್ತದೆ. ಬಹುಶಃ ಅಲ್ಲಿ ಮತ್ತಷ್ಟು ಸಂಘರ್ಷಗಳಿದ್ದವೇನೋ?
ಈ ವರ್ಷ ಮಾವಿನಮಿಡಿಯಿಲ್ಲ. ಹೊತ್ತಲ್ಲದ ಹೊತ್ತಲ್ಲಿ ಮಳೆ ಸುರಿಯುತ್ತದೆ. ದೇವಸ್ಥಾನದ ಜೀರ್ಣೋದ್ಧಾರ ಆಗಿಲ್ಲ, ಭಕ್ತಾದಿಗಳು ಹೆಚ್ಚಾಗಿದ್ದಾರೆ. ದೇವರ ಮಹಿಮೆಯ ಬಗ್ಗೆ ಪ್ರಚಾರ ಬೇಕು, ದುಡ್ಡಂತೂ ಧಾರಾಳವಾಗಿ ಹರಿದು ಬರುತ್ತದೆ. ಭಕ್ತರು ಉದಾರಿಗಳಾಗಿದ್ದಾರೆ.
ಉದಾರಿಗಳಾಗಬೇಕಾದದ್ದು ಭಕ್ತರೋ ದೇವರೋ ಎಂಬ ಗೊಂದಲದಲ್ಲಿ ಅರ್ಚಕರು ನಿಂತಿದ್ದರು. ದೇವರು ಉದಾರಿಯಾದರೆ ಇಡಿ ಪ್ರದೇಶ ಸುಭಿಕ್ಷವಾಗುತ್ತದೆ. ಭಕ್ತರು ಉದಾರಿಯಾದರೆ ದೊಡ್ಡ ದೇವಸ್ಥಾನ ಕಟ್ಟುತ್ತಾರೆ. ರಾಜಮಹಾರಾಜರು ಕಟ್ಟಿಸಿದ ದೇವಾಲಯಗಳನ್ನು ಪ್ರಾಚ್ಯವಸ್ತು ಇಲಾಖೆ ಶಿಲ್ಪಕಲೆಯೆಂಬ ಹೆಸರಲ್ಲಿ ಕಾಪಾಡುತ್ತದೆ. ಅಲ್ಲಿ ದೇವರೂ ಇಲ್ಲ. ಭಕ್ತಿಯೂ ಇಲ್ಲ, ಕೇವಲ ಸೌಂದರ್ಯ ಮಾತ್ರ. ಈಗಿನ ಹೊಸ ದೇವಾಲಯಗಳಲ್ಲಿ ಸೌಂದರ್ಯವೂ ಇಲ್ಲ, ಭಕ್ತಿಯೂ ಇಲ್ಲ. ಯಾರೋ ಜ್ಯೋತಿಷಿ ಎಳ್ಳು ಕೊಡಿ, ನೀರು ಕೊಡಿ, ಉಂಗುರ ಧರಿಸಿ, ಹಾರ ಹಾಕಿಕೊಳ್ಳಿ, ಹರಕೆ ಹೇಳಿ ಎಂದು ಸಲಹೆ ಕೊಡುತ್ತಾ ಭಯಂಕರ ರಗಳೆ ಮಾಡುತ್ತಿರುತ್ತಾರೆ. ಅದನ್ನು ನಂಬಿಕೊಂಡು ಹುಡುಗ ಹುಡುಗಿಯರೂ ತಾಯಿತ ಹಾಕಿಕೊಂಡು, ಕೈಗೊಂದು ದಾರ ಕಟ್ಟಿಕೊಂಡು ಓಡಾಡುತ್ತಾರೆ.
ನಮ್ಮ ಆತ್ಮವಿಶ್ವಾಸ, ಆರೋಗ್ಯವಂತ ಉಡಾಫೆ, ತಮಾಷೆ ಮಾಡುವ ಗುಣ ಮತ್ತು ನಮ್ಮ ಮೇಲೆ ನಮಗೇ ಇರುವ ನಂಬಿಕೆ ಕೂಡ ಪ್ರಾಚ್ಯವಸ್ತು ಸಂಗ್ರಹಾಲಯ ಸೇರಿಕೊಂಡಿದೆಯೇನೋ ಎಂದು ಅನುಮಾನವಾಗುತ್ತದೆ.